ಶಾರದೆ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ
ಮಂಗಳೂರು: ಕರ್ನಾಟಕದಲ್ಲಿ ಮೈಸೂರಿನಷ್ಟೇ ಸಂಭ್ರಮದಿಂದ ಇನ್ನೊಂದು ಕಡೆ ದಸರಾವನ್ನು ಆಚರಿಸಲಾಗುತ್ತದೆ. ಅದುವೇ ಮಂಗಳೂರು ದಸರಾ. ಮಂಗಳೂರಿನ ದಸರಾವನ್ನು ಮಾರ್ನೇಮಿ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಇಲ್ಲಿ ನವರಾತ್ರಿಗೆ ಶಾರದಾದೇವಿಯನ್ನು ಪ್ರತಿಷ್ಠಾಪಿಸುವುದು ವಿಶೇಷ.
ಮಂಗಳೂರು ದಸರಾ 2025ರ ಉದ್ಘಾಟನೆಯು ಇಂದು, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳನ್ನು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮತ್ತು ಬ್ರಹ್ಮಕುಮಾರಿಗಳ ಮುಖ್ಯಸ್ಥೆ ಬ್ರಹ್ಮಕುಮಾರಿ ವಿಶ್ವೇಶ್ವರೀ ಜಿ ಅವರ ಉಪಸ್ಥಿತಿಯಲ್ಲಿ, ಜನಾರ್ದನ ಪೂಜಾರಿ ಅವರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎ.ವಿ. ರಮಣ ಮತ್ತು ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಿದರು.
ಬೆಳಗ್ಗೆ 8.30ಕ್ಕೆ ಗುರು ಪ್ರಾರ್ಥನೆಯೊಂದಿಗೆ ಪುಣ್ಯಾಹ ಹೋಮ ನವಕಲಶಾಭಿಷೇಕ ನಡೆದು ಪೂರ್ವಾಹ್ನ 12ಗಂಟೆಗೆ ನವದುರ್ಗೆಯರು, ಮಹಾಗಣಪತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಪ್ರಾರಂಭಗೊಂಡು ಅಕ್ಟೋಬರ್ 2ರ ತನಕ ಕೇಂದ್ರದ ಮಾಜಿ ಸಚಿವರು, ಕ್ಷೇತ್ರದ ಅಭಿವೃದ್ಧಿಯ ರುವಾರಿ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ದಸರಾ (ನವರಾತ್ರಿ ಮಹೋತ್ಸವ) ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಿಜೃಂಬನೆಯಿಂದ ಜರುಗಲಿದೆ. ವೈದಿಕ ಪರಂಪರೆ, ಧಾರ್ಮಿಕ ಶ್ರದ್ದೆ, ಸಂಸ್ಕೃತಿಯ ಸಂಭ್ರಮ, ಸಂಗೀತದ ಸಪ್ತಸ್ವರ, ಕಲೆ. ಸಾಹಿತ್ಯ, ಕ್ರೀಡೆಸಾಧನೆಗಳ ಏಕತೆಯ ಸಮನ್ವಯ ನವದುರ್ಗೆಯ ಆರಾಧನೆಯ ಭವ್ಯ ದಸರಾ ಈ ಬಾರಿಯ ವಿಶೇಷತೆಯಾಗಿದೆ.