ಸಿಇಟಿ: ಅಲ್ಪಸಂಖ್ಯಾತರ ನಿಗಮದಿಂದ ವಿದ್ಯಾರ್ಥಿಗಳಿಗೆ ಸಾಲ-ಮೇಳ

Spread the love

ಸಿಇಟಿ: ಅಲ್ಪಸಂಖ್ಯಾತರ ನಿಗಮದಿಂದ ವಿದ್ಯಾರ್ಥಿಗಳಿಗೆ ಸಾಲ-ಮೇಳ

ಮ0ಗಳೂರು : ಪ್ರಸಕ್ತ ವರ್ಷ ಸಿಇಟಿ ಮೂಲಕ ಮೆಡಿಕಲ್-ಇಂಜಿನಿಯರಿಂಗ್ ಸೀಟುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲಗಳನ್ನು ಮಂಜೂರು ಮಾಡಲು ಸಾಲ-ಮೇಳ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ನಿಗಮದ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂದೆ ಹಣಕಾಸಿನ ಸಮಸ್ಯೆಯಿಂದಾಗಿ ಅನೇಕರು ತಮ್ಮ ವಿಧ್ಯಾಭ್ಯಾಸವನ್ನು ಅರ್ಧದಲ್ಲೇ ನಿಲ್ಲಿಸಬೇಕಾದ ವಿದ್ಯಮಾನಗಳು ನಡೆದಿದೆ. ಸಮಾಜದ ದುರ್ಬಲರು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಮುಂದೆ ಬರುವ ಉದ್ದೇಶದಿಂದ ರಾಜ್ಯ ಸರಕಾರ ಅನೇಕ ನೆರವು ನೀಡುತ್ತಿದೆ. ಇದನ್ನು ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಹಾಗೂ ತಮ್ಮ ಕುಟುಂಬದ ಗೌರವವನ್ನು ಹೆಚ್ಚಿಸಬೇಕು ಎಂದರು. ನಿಗಮದ ಮೂಲಕ ನೀಡುವ ಸಾಲವನ್ನು ಸಮರ್ಪಕವಾಗಿ ಬಳಸಿ, ಕ್ಲಪ್ತ ಸಮಯದಲ್ಲಿ ಸಾಲದ ಕಂತನ್ನು ಮರುಪಾವತಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಗೆ ನೆರವು ನೀಡಲು ಸಾಧ್ಯವಾಗಲಿದೆ ಎಂದರು.

ನಿಗಮದ ಜಿಲ್ಲಾ ವ್ಯವಸ್ಥಾಪಕ ಮುಹಮ್ಮದ್ ಸಫ್‍ವಾನ್ ಅವರು ಮಾತನಾಡಿ, ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ತ್ವರಿತವಾಗಿ ದಾಖಲೆ ಪ್ರಕ್ರಿಯೆಗಳು ನಡೆಯಲಿದೆ. ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ಸಾಲ ಮೇಳ ಕಾರ್ಯಕ್ರಮದಲ್ಲಿ ದಾಖಲಾತಿಗಳ ಪರಿಶೀಲನೆ ನಂತರ ಸ್ಥಳದಲ್ಲೇ ಮಂಜೂರಾತಿ ನೀಡಲಾಗುವುದು ಎಂದರು. ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ವ್ಯವಸ್ಥಾಪಕ ಖಾದರ್ ಅವರು ವಿವಿಧ ಶೈಕ್ಷಣಿಕ ನೆರವು ಯೋಜನೆಗಳ ಮಾಹಿತಿ ನೀಡಿದರು.

ಮಂಗಳವಾರ ನಡೆದ ಸಾಲ-ಮೇಳ ಕಾರ್ಯಕ್ರಮದಲ್ಲಿ ಸಿಇಟಿ ಪರೀಕ್ಷೆ ಬರೆದ ಸುಮಾರು 130ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬುಧವಾರವೂ ಈ ಕಾರ್ಯಕ್ರಮ ನಡೆಯಲಿದೆ.


Spread the love