ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪ್ರಕಟಿಸಿದ ಚಾಲಕನ ಬಂಧನ

Spread the love

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪ್ರಕಟಿಸಿದ ಚಾಲಕನ ಬಂಧನ

ಮಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಜನವರಿ 16ರಂದು ಅಪ್ಲೋಡ್ ಮಾಡಿದ್ದ ಕ್ಯಾಬ್ ಚಾಲಕನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಅನಿಲ್ ಕುಮಾರ್ (34) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಸುರತ್ಕಲ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಅನಿಲ್ ಕುಮಾರ್ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎನ್ಎಸ್ಯುಐ ಮುಖಂಡ ಸುಹಾನ್ ಆಳ್ವಾ ಅವರು ಅನಿಲ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ಆರೋಪಿ ಅನಿಲ್ ಕುಮಾರ್ ನನ್ನು ಸುರತ್ಕಲ್ ಪೊಲೀಸರು ಸೆಕ್ಷನ್ 153ಎ, 505(ಐ)(ಸಿ), 504 ಐಪಿಸಿ ಅಡಿಯಲ್ಲಿ ಬಂಧಿಸಿದ್ದಾರೆ.

ಆರೋಪಿ ಅನಿಲ್ ಕುಮಾರ್ ಕಳೆದ 12 ವರ್ಷಗಳಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಕಳೆದ ಮೂರು ತಿಂಗಳಿನಿಂದ ಮಂಗಳೂರಿನಲ್ಲಿ ಪಡಿತರ ಚೀಟಿಗೆ ಹೆಸರು ಸೇರಿಸಲು ಅನಿಲ್ ಕುಮಾರ್ ಅವರು ಸರ್ಕಾರಿ ಯೋಜನೆಗಳ ಎಲ್ಲಾ ಪ್ರಯೋಜನಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದರು ಆದರೆ ಅವರ ಪ್ರಯತ್ನ ಯಶಸ್ವಿಯಾಗರಲಿಲ್ಲ.

ಇದರಿಂದ ಹತಾಶನಾದ ಅನಿಲ್, ಜನವರಿ 16ರಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love