ಸೋಮೇಶ್ವರ: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

Spread the love

ಸೋಮೇಶ್ವರ: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

ಉಳ್ಳಾಲ: ಸೋಮೇಶ್ವರ ಸಮುದ್ರತೀರಕ್ಕೆ ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿರುವ ಘಟನೆ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳಿಗಾಗಿ ಸ್ಥಳೀಯ ಈಜುಗಾರರು ಹಾಗೂ ಉಳ್ಳಾಲ ಠಾಣಾ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯೆಶ್ವಿತ್ (18) ಮತ್ತು ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬವರ ಪುತ್ರ ಯುವರಾಜ್ (18) ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದವರು. ಇಬ್ಬರು ಸಮೀಪದ ಸೋಮೇಶ್ವರ ಪರಿಜ್ಞಾನ ಪಿಯುಸಿ ಕಾಲೇಜಿನ ದ್ವಿ ತೀಯ ವರ್ಷ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮಧ್ಯಾಹ್ನ ನಂತರ ಸಮುದ್ರ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿ ಸಮುದ್ರದ ಅಲೆಗಳ ನಡುವೆ ಸಿಲುಕಿದರೆ, ಇನ್ನೋರ್ವ ವಿದ್ಯಾರ್ಥಿ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಇಬ್ಬರು ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಭೇಟಿ ನೀಡಿದ್ದು, ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ಸಹಕಾರದೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಅಲೆಗಳ ಅಬ್ಬರವಿದೆ ಈಜದಿರಿ !
ಸೋಮೇಶ್ವರ ಸಮುದ್ರ ತೀರ ಈಗಾಗಲೇ ಹಲವು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಕುರಿತು ಸ್ಥಳದಲ್ಲಿರುವ ಬಂಡೆಗಳಲ್ಲಿ ಹಾಗೂ ಇಲಾಖೆ ವತಿಯಿಂದ ನಾಮಫಲಕಗಳನ್ನು ಅಳವಡಿಸಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವಂತೆ ಕೋರಲಾಗಿದೆ . ಆದರೂ ಸ್ಥಳದಲ್ಲಿ ವಿಹಾರಕ್ಕೆಂದು ಬರುವ ವಿದ್ಯಾರ್ಥಿಗಳು, ಪ್ರವಾಸಿಗರು ಹೋಂಗಾಡ್೯ಗಳ ಮತ್ತು ನಾಮಫಲಕಗಳನ್ನು ಗಮನಿಸಿಯೂ ಸಮುದ್ರಕ್ಕೆ ಇಳಿದು ಜೀವ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಸ್ಥಳಕ್ಕೆ ಬರುವವರು ಮುಮಜಾಗ್ರತಾ ವಹಿಸಿ ವಿಹರಿಸುವಂತೆ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.


Spread the love