ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಗೆಲುವು ಖಚಿತ – ಜನಾರ್ದನ ತೋನ್ಸೆ

Spread the love

ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಗೆಲುವು ಖಚಿತ – ಜನಾರ್ದನ ತೋನ್ಸೆ

ಉಡುಪಿ: ಮುಂಬರುವ ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸ್ಥಳಿಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಲವಾಗಿ ಜಯಗಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜನಾರ್ದನ ತೋನ್ಸೆಯವರು ಹೇಳಿದರು.

ಪಂಚಾಯತ್ ರಾಜ್ ಸಂಸ್ಥೆಗಳ ಮಾದರಿಯಲ್ಲಿಯೇ ಇದೇ ಮೊದಲ ಬಾರಿಗೆ ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲು ಕಲ್ಪಿಸಲಾಗಿದೆ. ಇದುವರೆಗೆ ಶೇ.33ರಷ್ಟು ಮಹಿಳೆಯರಿಗೆ ಮೀಸಲು ಇತ್ತು. ಇದು ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಬಲ ನೀಡಲಿದೆ ಇದರಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕರಂಗವಲ್ಲದೆ ರಾಜಕೀಯ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಪ್ರಾತಿನಿದ್ಯ ದೊರೆತಂತಾಗುತ್ತದೆ ಎಂದು ಅವರು ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಚುನಾವಣಾ ಅವಲೋಕನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಬಾರಿಯೂ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿತ್ತು, ಆದರೆ ಬಿಜೆಪಿ ಕಾಂಗ್ರೆಸ್ ಪಕ್ಷದ ಗೆಲುವನ್ನು ಹಗಲುಗನಸು ಎಂದು ಮೂದಲಿಸಿತ್ತು. ಜನತೆ ನಗರಸಭೆಯಲ್ಲಿ ಬಿಜೆಪಿಯನ್ನು ಆಡಳಿತದಿಂದಲೇ ಮುಕ್ತಗೊಳಿಸಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದರು.

ನಗರದ ಜನತೆ ಬಿಜೆಪಿಯ ಈ ಹಿಂದಿನ ದುರಾಡಳಿತ, ಭ್ರಷ್ಟಾಚಾರಗಳನ್ನು ಮರೆತಿಲ್ಲ. ಕಾಂಗ್ರೆಸ್ ಆಡಳಿತಾವಧಿಯ ಅಭಿವೃದ್ಧಿಯನ್ನು ಜನರ ಮುಂದಿಟ್ಟು ನಗರಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಹೆಚ್ಚಿನ ಮತ ಹಾಕಿ ಗೆಲ್ಲಿಸುವಂತೆ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು.

ಸ್ಥಳೀಯ ಮಟ್ಟದಲ್ಲಿ ಸಚ್ಚಾರಿತ್ರ್ಯ ಹೊಂದಿದ ಹಾಗೂ ಪ್ರಭಾವಿಗಳಾಗಿದ್ದವರನ್ನು ಪಕ್ಷ ಸ್ಪರ್ಧೆಗೆ ಇಳಿಸಿದ್ದು ಅವರೆಲ್ಲರೂ ಜನಪರವಾಗಿ ಕೆಲಸ ಮಾಡಿದವರು. ಹೀಗಾಗಿ ಬಿಜೆಪಿಯ ಯಾವುದೇ ಸುಳ್ಳು ವದಂತಿಗಳು ಈ ಚುನಾವಣೆಯಲ್ಲಿ ಕಾರ್ಯರೂಪಕ್ಕೆ ಬರಲಾರದು. ಅಭಿವೃದ್ಧಿಪರ ಕಾಂಗ್ರೆಸ್ ಎನ್ನುವ ಭಾವನೆ ಸ್ಥಳೀಯ ಮತದಾರರಲ್ಲಿದೆ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸ್ವಲ್ಪ ಹಿನ್ನಡೆಯಾಗಿದ್ದರೂ ಈ ಬಾರಿ ಚುನಾವಣೆಯಲ್ಲಿ ಪಕ್ಷ ಮತ್ತೆ ಜಿಲ್ಲೆಯ 4 ಕಡೆಗಳಲ್ಲಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ಬಿ. ನರಸಿಂಹ ಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರೀಶ್ ಕಿಣಿ, ಉದ್ಯಾವರ ನಾಗೇಶ್ ಕುಮಾರ್, ಬ್ಲಾಕ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕರೆ, ಸದಾಶಿವ ಕಟ್ಟೆಗುಡ್ಡೆ, ಜನಾರ್ದನ ಭಂಡಾರ್ಕಾರ್, ಹಬೀಬ್ ಅಲಿ ಮೊದಲಾದವರು ಉಪಸ್ಥಿತರಿದ್ದರು.


Spread the love