ಹವ್ಯಾಸಗಳು ಚಟವಾಗಿ ಮಾರ್ಪಟ್ಟರೆ ಯುವ ಸಂಪತ್ತು ನಾಶ : ಪ್ರಮೋದ್ ಮಧ್ವರಾಜ್

Spread the love

ಹವ್ಯಾಸಗಳು ಚಟವಾಗಿ ಮಾರ್ಪಟ್ಟರೆ ಯುವ ಸಂಪತ್ತು ನಾಶ : ಪ್ರಮೋದ್ ಮಧ್ವರಾಜ್

ಉಡುಪಿ : ಕುತೂಹಲದಿಂದಾಗಲೀ, ಗೆಳೆತನದಿಂದಾಗಲೀ ಸಿಗರೇಟು ಮತ್ತು ಕುಡಿತದಂತಹ ಹವ್ಯಾಸಗಳು ಚಟವಾಗಿ ಮಾರ್ಪಟ್ಟರೆ ಅಮೂಲ್ಯವಾದ ಯುವ ಸಂಪತ್ತು ನಾಶವಾಗುತ್ತದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮತ್ತು ನಿಷೇಧ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನ 2017 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಾನವ ಸಂಪನ್ಮೂಲಕ್ಕೆ ಇಂದು ಎಲ್ಲಕ್ಕಿಂತ ಹೆಚ್ಚಿನ ಮೌಲ್ಯವಿದ್ದು, ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಜೊತೆ ಎಲ್ಲಾ ವಿಷಯಗಳಲ್ಲೂ ಹತೋಟಿ ಮೀರದಂತೆ ವರ್ತಿಸುವುದರಿಂದ ವಿದ್ಯಾರ್ಥಿ ಶಕ್ತಿ ಉತ್ತಮ ಮಾನವ ಸಂಪನ್ಮೂಲವಾಗಿ ಪರಿವರ್ತನೆಗೊಂಡು ದೇಶ ಪ್ರಗತಿಯತ್ತ ಸಾಗಲಿದೆ. ಎಂದು ಸಚಿವರು ಹೇಳಿದರು.

ರಾಜ್ಯ ಸರಕಾರವು ವಿದ್ಯಾರ್ಥಿಗಳು ಭವಿಷ್ಯವನ್ನು ಗಮನದಲ್ಲಿರಿಸಿ ಇತ್ತೀಚಿಗೆ ಕೌಶಲ್ಯ ಹೆಚ್ಚಿಸಿ ತರಬೇತಿ ನೀಡಲು kaushalkar.com ಆರಂಭಿಸಿದ್ದು, ಯುವಜನರು ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಸಚಿವರು ವಿನಂತಿಸಿದರು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಉದ್ಘಾಟಿಸಿ ಶುಭ ಹಾರೈಸಿದರು.

ಜಿಲ್ಲಾ ಪಂಚಾಯತ್ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಉದಯ ಎಸ್ ಕೊಟ್ಯಾನ್ ಮಾತನಾಡಿ, ಉತ್ತಮ ಹವ್ಯಾಸಗಳಿಂದ ವಿದ್ಯಾರ್ಥಿ ಜೀವನ ನಳನಳಿಸಲಿ. ವಿದ್ಯಾರ್ಥಿಗಳನ್ನೊಳಗೊಂಡಂತೆ ಯಾರೂ ದುಶ್ಚಟಕ್ಕೆ ಬಲಿಯಾಗದಿರಿ ಎಂದು ಹೇಳಿದರು. ಶಾಲಾ ಕಾಲೇಜುಗಳ ಸುತ್ತಲೂ ಗೂಡಂಗಡಿಗಳಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡದ ರೀತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ನಗರಸಭೆಯ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ ಮಾತನಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಲತಾ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕರಾದ ಮಹಾಂತೇಶ್ ಬಿ ಯು. ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರೋಹಿಣಿ ಸ್ವಾಗತಿಸಿ,ಪ್ರಾಸ್ತಾವಿಕ ನುಡಿಗಳನ್ನಾಡಿದರು.


Spread the love