ಹೆರಿಗೆ ವೇಳೆ ಮಗು ಸಾವು: ವೈದ್ಯರ ನಿರ್ಲಕ್ಷ ಆರೋಪಿಸಿ ಪ್ರತಿಭಟನೆ

Spread the love

ಹೆರಿಗೆ ವೇಳೆ ಮಗು ಸಾವು: ವೈದ್ಯರ ನಿರ್ಲಕ್ಷ ಆರೋಪಿಸಿ ಪ್ರತಿಭಟನೆ

ಕುಂದಾಪುರ: ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ಹೆರಿಗೆ ವೇಳೆ ಮಗು ಮೃತಪಟ್ಟ ಘಟನೆ ನಡೆದಿದ್ದು ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಪೋಷಕರು ತಡರಾತ್ರಿಯವರೆಗೂ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ನ.17ರಂದು ರಾತ್ರಿ 10.30 ರ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಅವರ ಪತ್ನಿ ಹೆರಿಗೆ ನೋವಿನಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ. ಇದು ವೈದ್ಯರ ನಿರ್ಲಕ್ಷ್ಯದಿಂದ ಆದ ಸಾವು ಎಂದು ಊರವರು ಹಾಗೂ ಮನೆಯವರು ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಪಟ್ಟ ವೈದ್ಯರ ಅಮಾನತು ಮಾಡಿ, ಪ್ರಕರಣದ ಸಮಗ್ರ ತನಿಖೆ ನಡೆಸಿ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮವಹಿಸಬೇಕು. ಸ್ಥಳಕ್ಕೆ ಡಿಸಿ, ಜಿಲ್ಲಾ ಆರೋಗ್ಯಾಧಿಕಾರಿ ಬರಬೇಕು ಎಂದು ಸೋಮವಾರ ಸಂಜೆ ಆಸ್ಪತ್ರೆಯೆದರುರು ಕೂತು ಪ್ರತಿಭಟನೆ ಮೂಲಕ ಒತ್ತಾಯಿಸಿದರು.

ಮಗುವಿನ ಕುತ್ತಿಗೆಗೆ ಹೊಕ್ಕುಳಬಳ್ಳಿ ಸುತ್ತಿಕೊಂಡು ಸಾವಾಗಿದೆ ಎಂದು ವೈದ್ಯರು ತಿಳಿಸಿದ್ದು ಉಡಾಫೆಯಿಂದ ಮಾತಾಡಿದ್ದಾಗಿ ಕುಟುಂಬಿಕರು ಆರೋಪಿಸಿದ್ದಾರೆ. ರಕ್ತಸ್ರಾವ ಇದೆ, ಹೊಟ್ಟೆ ನೋವು ಇದೆ ಎಂದರೂ ವೈದ್ಯರು ಕ್ಯಾರೇ ಮಾಡಿಲ್ಲ. ಎಂಟೂವರೆ ತಿಂಗಳಿನ ವೇಳೆ ಸ್ಕಾನಿಂಗ್ ಮಾಡದ ಕಾರಣ ಈಗ ಸ್ಕ್ಯಾನಿಂಗ್ ಮಾಡಿ ಎಂದು ಮನೆಯವರು ಒತ್ತಾಯಿಸಿದರೂ ವೈದ್ಯರು ಸ್ಕಾನಿಂಗ್ ಮಾಡಿಸಲಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಉಪ ವಿಭಾಗ ಆಸ್ಪತ್ರೆಯ ಆಡಳಿತ ಶಸ್ತ್ರ ಚಿಕಿತ್ಸಕ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ಸ್ಥಳಕ್ಕೆ ತೆರಳಿ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಲಾಗುವುದು ಎಂದರೂ ಪ್ರತಿಭಟನಕಾರರು ಸ್ಥಳ ಬಿಟ್ಟು ಕದಲಲಿಲ್ಲ. ರಾತ್ರಿ 9 ರ ತನಕವೂ ಪ್ರತಿಭಟನೆ ಮುಂದುವರೆದಿದ್ದು ಡಿ.ಎಚ್.ಒ ಹಾಗೂ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸ್ಥಳದಲ್ಲಿದ್ದಾರೆ.

ಸ್ಥಳಕ್ಕೆ ಬಂದಿರುವ ಡಿಎಚ್ ಒ, ತಹಶೀಲ್ದಾರ್ ಹಾಗೂ ಸಹಾಯಕ ಕಮೀಷನರ್ ಪ್ರತಿಭಟನಾ ನಿರತರ ಮನವೊಲಿಸಲು ಯತ್ನಿಸಿದ್ದು, ವೈದ್ಯರ ಸಸ್ಪೆಂಡ್ ಮಾಡುವ ತನಕವೂ ಪ್ರತಿಭಟನೆ ಕೈಬಿಡಲ್ಲ ಎಂದು ಪ್ರತಿಭಟನಾಕಾರರಿಂದ ಪಟ್ಟು ಹಿಡಿದಿದ್ದಾರೆ.

ಕುಂದಾಪುರ ನಗರ ಠಾಣೆ ಇನ್ಸ್ಪೆಕ್ಟರ್ ನಂದಕುಮಾರ್, ಪಿಎಸ್ಐ ಪ್ರಸಾದ್, ಸಂಚಾರ ಠಾಣೆ ಪಿಎಸ್ಐ ಸುಬ್ಬಣ್ಣ ನೇತೃತ್ವದಲ್ಲಿ ಬಂದೋ ಬಸ್ತ್ ಮಾಡಲಾಗಿದೆ


Spread the love