ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ 23 ಲಕ್ಷ ರೂ. ವಂಚನೆ: ಮುಖ್ಯ ಪುಸ್ತಕ ಬರಹಗಾರ್ತಿ ಸಹಿತ ಇಬ್ಬರ ಬಂಧನ

Spread the love

ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ 23 ಲಕ್ಷ ರೂ. ವಂಚನೆ: ಮುಖ್ಯ ಪುಸ್ತಕ ಬರಹಗಾರ್ತಿ ಸಹಿತ ಇಬ್ಬರ ಬಂಧನ

ಉಡುಪಿ: ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಹಣವನ್ನು ದುರ್ಬಳಕೆ ಮಾಡಿಕೊಂಡು ಸುಮಾರು ₹23 ಲಕ್ಷ ವಂಚನೆ ಎಸಗಿದ ಆರೋಪದಡಿ ಮುಖ್ಯ ಪುಸ್ತಕ ಬರಹಗಾರ್ತಿ ಹಾಗೂ ಆಕೆಯ ಪತಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸುಗಂಧಿ ಹಾಗೂ ಆಕೆಯ ಪತಿ ಸಂತೋಷ್ ಎಂದು ಗುರುತಿಸಲಾಗಿದೆ. ಇವರು ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ (ರಿ.)ದಲ್ಲಿ ನಡೆದಿರುವ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ, 2023ರಿಂದ 2025ರವರೆಗೆ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್ನಲ್ಲಿ ದಾಖಲಿಸಿ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೆ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಇದರ ಜೊತೆಗೆ ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್ಗಳಿಗೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರ ನಕಲಿ ಸಹಿಗಳನ್ನು ಹಾಕಿ ಬ್ಯಾಂಕ್ನಿಂದ ಹಣವನ್ನು ಹಿಂಪಡೆದಿರುವುದು, ಲೆಕ್ಕಪರಿಶೋಧನೆ ವೇಳೆ ಅಕ್ರಮ ಬಯಲಾಗದಂತೆ ಪ್ರತ್ಯೇಕ ಸಾಲದ ಖಾತೆ ಪುಸ್ತಕಗಳನ್ನು ನಿರ್ವಹಿಸಿರುವುದು ಹಾಗೂ ಕಾರ್ಯಕಾರಿ ಸಮಿತಿಗೆ ಅನುಮಾನ ಬಾರದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿ ಸುಮಾರು ₹23 ಲಕ್ಷ ಹಣವನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ.

ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ನಿರ್ದೇಶನ ಹಾಗೂ ಹಿರಿಯಡಕ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಗೋಪೀಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐ (ಕಾನೂನು ಮತ್ತು ಸುವ್ಯವಸ್ಥೆ) ಪುನೀತ್ ಕುಮಾರ್ ಬಿ.ಇ. ಹಾಗೂ ಪಿಎಸ್ಐ (ತನಿಖೆ) ವಿಠ್ಠಲ ಮಲವಡಕರ ನೇತೃತ್ವದ ತಂಡವು ಜುಲೈ 6ರಂದು ಆರೋಪಿತರಾದ ಸುಗಂಧಿ ಮತ್ತು ಸಂತೋಷ್ ಅವರನ್ನು ವಶಕ್ಕೆ ಪಡೆದು ಬಂಧಿಸಿ ವಿಚಾರಣೆ ನಡೆಸಿದೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿತೆ ಸುಗಂಧಿ ಹಾಗೂ ಆಕೆಯ ಪತಿ ಸಂತೋಷ್ ಸೇರಿಕೊಂಡು ಸಂಘದ ವಿವಿಧ ಸದಸ್ಯರ ಹೆಸರಿನಲ್ಲಿ ನಕಲಿ ಸಹಿ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ಬೆಳಕಿಗೆ ಬಂದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಹಿರಿಯಡಕ ಪೊಲೀಸರು ಮುಂದುವರಿಸಿದ್ದಾರೆ.


Spread the love
Subscribe
Notify of

0 Comments