ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು – ಬಸ್ಸಿನ ನಡುವೆ ಅಪಘಾತ: ಆಪ್ತ ಸಹಾಯಕನಿಗೆ ಗಾಯ
ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ಖಾಸಗಿ ಬಸ್ಸು ನಡುವೆ ಅಫಘಾತ ಸಂಭವಿಸಿದ ಘಟನೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಾಣೂರು ಗ್ರಾಮದ ಬಳಿ ಕಾರ್ಕಳ–ಮೂಡುಬಿದಿರೆ ರಸ್ತೆಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪ್ರಕಾರ ರವಿವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಮಾಜಿ ಸಚಿವ ರಮಾನಾಥ ರೈ ಅವರು ತಮ್ಮ ಇನ್ನೋವಾ ಕಾರಿನಲ್ಲಿ ತಮ್ಮ ಆಪ್ತ ಸಹಾಯಕ ಡೆನ್ಜಿಲ್, ಹಾಗೂ ಗನ್ ಮ್ಯಾನ್ ಅವರೊಂದಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಖಾಸಗಿ ಬಸ್ಸು ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಪಿಎ ಡೆನ್ಜೆಲ್ ಅವರ ಬಲಗಾಲಿಗೆ ಮುರಿತವಾಗಿದ್ದು, ಚಿಕಿತ್ಸೆಗಾಗಿ ಕಾರ್ಕಳದ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಯೇನಪೋಯಾ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಘಟನೆಯಲ್ಲಿ ರಮಾನಾಥ ರೈ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಾರ್ಕಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಮಾಹಿತಿ ಪಡೆದುಕೊಂಡಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.