ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ : ಡಾ. ಶ್ರುತಿ ಬಲ್ಲಾಳ್
ಉಡುಪಿ: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ ಜೀವನ ಶೈಲಿಯೊಂದಿಗೆ ಉತ್ತಮ ಆರೋಗ್ಯದ ಬಗ್ಗೆ ಕಾಳಜಿವಹಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ಮುಂದಾಗಬೇಕು. ಶಾಸಕ ಯಶ್ಪಾಲ್ ಸುವರ್ಣ ರವರು ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಿರುವ ಪ್ರತಿಭಾ ಪುರಸ್ಕಾರ ತಮ್ಮ ಮುಂದಿನ ಶೈಕ್ಷಣಿಕ ಸಾಧನೆಗೆ ಸಹಕಾರಿಯಾಗಲಿ ಎಂದು ಉಡುಪಿಯ ಖ್ಯಾತ ಮಧುಮೇಹ ತಜ್ಞ ವೈದ್ಯರಾದ ಡಾ. ಶ್ರುತಿ ಬಲ್ಲಾಳ್ ಹೇಳಿದರು.
ಪುಷ್ಪಾನಂದ ಫೌಂಡೇಶನ್ ವತಿಯಿಂದ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಉಡುಪಿ ತಾಲೂಕಿನ 554 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ತಮ್ಮ ತಂದೆ ತಾಯಿಯ ಹೆಸರಿನಲ್ಲಿ ಆರಂಭಿಸಿರುವ ಫೌಂಡೇಶನ್ ಮೂಲಕ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಅತ್ಯಂತ ಸಂತಸ ತಂದಿದ್ದು, ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಸಾಧನೆ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ನೀಡಲಿ ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಮಾತನಾಡಿ ಶಾಸಕ ಯಶ್ ಪಾಲ್ ಸುವರ್ಣ ತಮ್ಮ ಪುಷ್ಪಾನಂದ ಫೌಂಡೇಶನ್ ಹಾಗೂ ಅಧ್ಯಕ್ಷರಾಗಿರುವ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮೀ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ಶಿಕ್ಷಣದ ಬಗ್ಗೆ ತಮ್ಮ ಸಾಮಾಜಿಕ ಬದ್ಧತೆಯನ್ನು ನಿರೂಪಿಸಿದ್ದಾರೆ ಎಂದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಅಜ್ಜರಕಾಡು ವಾರ್ಡಿನ ಮಾಜಿ ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಕುಮಾರ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಇಂದಿರಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶ್ರೀಮತಿ ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.













