ಅಮಾಸೆಬೈಲು | ಅಕ್ರಮ ಜಾನುವಾರು ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ
ಕುಂದಾಪುರ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ
ಬಂಧಿತ ಆರೋಪಿಗಳನ್ನು ಮುಸ್ತಾಕ್ ಹುಸೇನ್ ಸಾಬ್ ನದಾಫ್ (29), ಸಲೀಂ ಹುಸೇನ್ ಸಾಬ್ ನದಾಫ್ (33) ಇಬ್ಬರೂ ಬೆಳಗಾವಿ ಜಿಲ್ಲೆಯ ರಾಮದುರ್ಗ ಭಾಗ್ಯನಗರ ನಿವಾಸಿಗಳು ಹಾಗೂ ನದೀಂ ಅಬ್ದುಲ್ ಖಾದರ್ (34), ಶಿರೂರು ಬೈಂದೂರು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಶನಿವಾರ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಅಮಾಸೆಬೈಲು ಠಾಣೆಯ ಪಿಎಸ್ಐ ಅಶೋಕ್ ಕುಮಾರ್ ಅವರಿಗೆ ಹೊಸಂಗಡಿ ಚೆಕ್ ಪೋಸ್ಟ್ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯಿಂದ ಮಾಹಿತಿ ಲಭಿಸಿದ್ದು, ಭಾನುವಾರ ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ಹುಲಿಕಲ್ ಘಾಟಿ ಕಡೆಯಿಂದ ಟಾಟಾ ಇಂಟ್ರಾ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ, ಅದರಲ್ಲಿದ್ದ ಎರಡು ಎತ್ತುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಾಟ ಮಾಡುತ್ತಿರುವುದು ಪತ್ತೆಯಾಯಿತು.
ಚಾಲಕನನ್ನು ವಿಚಾರಿಸಿದಾಗ ಜಾನುವಾರುಗಳನ್ನು ಮಾಂಸಕ್ಕಾಗಿ ವಧೆಗೆ ಕೊಂಡೊಯ್ಯುತ್ತಿರುವುದಾಗಿ ತಿಳಿದುಬಂದಿದೆ. ಜಾನುವಾರುಗಳ ಅಂದಾಜು ಮೌಲ್ಯ ₹1,00,000 ಹಾಗೂ ವಾಹನದ ಮೌಲ್ಯ ₹4 ಲಕ್ಷ ಎಂದು ಅಂದಾಜಿಸಲಾಗಿದೆ.
ಇದೇ ವೇಳೆ ಹಿಂಬಾಲಿಸುತ್ತಿದ್ದ ಟೊಯೋಟಾ ಎಟಿಯೋಸ್ ಕಾರು ಅಕ್ರಮ ಸಾಗಾಟಕ್ಕೆ ಬೆಂಗಾವಲಾಗಿ ಬಂದಿರುವುದಾಗಿ ಅನುಮಾನಿಸಿ ನಿಲ್ಲಿಸಲಾಯಿತು. ಕಾರು ನಿಲ್ಲಿಸಿದ ತಕ್ಷಣ ಚಾಲಕ ಹಾಗೂ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದು, ಕಾರಿನಲ್ಲಿದ್ದ ಇನ್ನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರಿನ ಅಂದಾಜು ಮೌಲ್ಯ ₹5 ಲಕ್ಷವಾಗಿದೆ.
ಪೊಲೀಸರು ಜಾನುವಾರುಗಳು, ವಾಹನಗಳು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.













