ವಿಧಾನ ಸೌಧದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಮೂಲಕ ರಾಜ್ಯ ಸರ್ಕಾರದ ವೈಫಲ್ಯ ಮರೆಮಾಚಲು ಯತ್ನ : ಯಶ್ಪಾಲ್ ಸುವರ್ಣ
ರಾಜ್ಯದ ಶಕ್ತಿಸೌಧ ಎಂದೇ ಗುರುತಿಸಲ್ಪಟಿರುವ ವಿಧಾನಸೌಧದಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮವನ್ನು ನಿರ್ಬಂಧಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತಮ್ಮ ವೈಫಲ್ಯವನ್ನು ಮರೆಮಾಚಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಗೊಂದಲದಲ್ಲಿ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಪಕ್ಷದ ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿ ಶಾಸಕರು ವಿದೇಶ ಪ್ರವಾಸ ನಡೆಸುತ್ತಿರುವ ಸಂದರ್ಭದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಮೂಲಕ ಸರ್ಕಾರದ ಅಸ್ಥಿರತೆಯನ್ನು ಮರೆಮಾಚಲು ಮುಂದಾಗಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯ, ಸಂವಿಧಾನದ ಆಶಯಗಳ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ರಾಜ್ಯ ಸರಕಾರದ ಭ್ರಷ್ಟಾಚಾರ, ವರ್ಗಾವಣೆ ಧಂಧೆ, ಹಗರಣಗಳು, ಸಚಿವರ ಅಕ್ರಮಗಳ ಬಗ್ಗೆ ಬೆದರಿ ಮಾಧ್ಯಮಗಳನ್ನು ಎದುರಿಸಲು ಸಾಧ್ಯವಾಗದೆ “ಕಳ್ಳನ ಮನಸ್ಸು ಹುಳ್ಳಗೆ” ಎಂಬ ಗಾದೆ ಮಾತಿನಂತೆ ಪರೋಕ್ಷವಾಗಿ ರಾಜ್ಯದಲ್ಲಿ ಮಾಧ್ಯಮಗಳ ಮೇಲೆ ಅಘೋಷಿತ ತುರ್ತುಪರಿಸ್ಥಿತಿ ಹೇರಿದ್ದಾರೆ.
ಸಿದ್ದರಾಮಯ್ಯ ಸರಕಾರ ಮಾಧ್ಯಮಗಳನ್ನು ನಿರ್ಬಂಧಿಸುವ ಮೂಲಕ ಪ್ರಜಾಪ್ರಭುತ್ವದ ಆಶಯಕ್ಕೆ ಕೊಡಲಿಯೇಟು ನೀಡಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ತಮ್ಮ ನಿರ್ಧಾರವನ್ನು ತಕ್ಷಣ ಹಿಂಪಡೆದು ರಾಜ್ಯದಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮಕ್ಕೆ ಮುಕ್ತ ಅವಕಾಶ ನೀಡುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
