ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ; ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ವಶಕ್ಕೆ
ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆ ವಿಚಾರವನ್ನು ಮುಂದಿಟ್ಟುಕೊಂಡು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಪ್ರತಿಭಟನೆಗೆ ಮುಂದಾಗಿದ್ದು, ಪ್ರತಿಭಟನೆಗೂ ಮುನ್ನವೇ ಪೊಲೀಸರು 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಉಡುಪಿಯ ಉದ್ಯಾವರ ಬಲೈಪಾದೆ ಬಳಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಸ್ಥಳಕ್ಕೆ ಆಗಮಿಸಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ತಮಿಳುನಾಡು ಸಿಎಂ ವಿಜಯ್ ಅವರ ಆಗಮನಕ್ಕೂ ಮುನ್ನವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.
ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.













