ಬೆಳ್ತಂಗಡಿ: ಎರಡು ಕಾರುಗಳು ಮುಖಾಮುಖಿ ಢಿಕ್ಕಿ; ಆರು ಮಂದಿಗೆ ಗಾಯ
ಬೆಳ್ತಂಗಡಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದು, ಎರಡೂ ವಾಹನಗಳು ನುಜ್ಜುಗುಜ್ಜಾದ ಘಟನೆ ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಗಾಯಗೊಂಡವರನ್ನು ಮಂಗಳೂರು ಕಾವೂರು ಮೂಲದವರಾದ ವಿನಿತಾ (22), ಗೌರಮ್ಮ (49) ಮತ್ತು ಕೊಟ್ರೆಗೌಡ (55), ಯಾದಗಿರಿ ಜಿಲ್ಲೆಯ ಸುರಪುರ ಮೂಲದವರಾದ ಭೀಮಣ್ಣ (65), ಶ್ರೀನಿವಾಸ (32) ಮತ್ತು ಶಶಿಧರ (33) ಎಂದು ಗುರುತಿಸಲಾಗಿದೆ.
ಅಪಘಾತದ ನಂತರ ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
