ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ
ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ), ಉಚ್ಚಿಲ ಇದರ ವತಿಯಿಂದ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲಾದ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣೆ ಸಮಾರಂಭ ಸೆಪ್ಟೆಂಬರ್ 25ರಂದು ನಡೆಯಲಿದೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ.
ಗುರಿಕಾರರಿಗೆ ಗೌರವಧನ ವಿತರಣೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ನೆರವೇರಿಸಲಿದ್ದಾರೆ.
ನಾಡೋಜ ಡಾ. ಜಿ. ಶಂಕರ್, ಗೌರವ ಸಲಹೆಗಾರರು, ದ.ಕ. ಮೊಗವೀರ ಮಹಾಜನ ಸಂಘ (ರಿ), ಉಚ್ಚಿಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಐಎಎಸ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಹಾಗೂ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಸೇರಿದಂತೆ ಹಲವು ಗಣ್ಯರು ಗೌರವ ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ.
ಇದೇ ವೇಳೆ ಉದ್ಯಮಿ ಆನಂದ್ ಸಿ. ಕುಂದರ್, ದ.ಕ. ಮೊಗವೀರ ಮಹಾಜನ ಸಂಘ (ರಿ) ಮುಂಬೈ ಸಮಿತಿಯ ಗೌರವಾಧ್ಯಕ್ಷ ವೇದ್ ಪ್ರಕಾಶ್ ಶ್ರೀಯಾನ್, ಮೊಗವೀರ ವ್ಯವಸ್ಥಾಪಕ ಮಂಡಳಿ (ರಿ) ಮುಂಬೈ ಅಧ್ಯಕ್ಷ ಗಣೇಶ್ ಕಾಂಚನ್ ಹಾಗೂ ಮೊಗವೀರ ಮಹಾಜನ ಸೇವಾ ಸಂಘ (ರಿ), ಬಗ್ವಾಡಿ, ಮುಂಬೈ ಅಧ್ಯಕ್ಷ ಸಂತೋಷ್ ಪುತ್ರನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.













