Home Mangalorean News Kannada News ಕಾರ್ಮಿಕನ ಶವ ಬಾವಿಯಲ್ಲಿ ಪತ್ತೆ ಪ್ರಕರಣ – ಸಹೋದರನ ಬಂಧನ

ಕಾರ್ಮಿಕನ ಶವ ಬಾವಿಯಲ್ಲಿ ಪತ್ತೆ ಪ್ರಕರಣ – ಸಹೋದರನ ಬಂಧನ

Spread the love

ಕಾರ್ಮಿಕನ ಶವ ಬಾವಿಯಲ್ಲಿ ಪತ್ತೆ ಪ್ರಕರಣ – ಸಹೋದರನ ಬಂಧನ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠದ ಸಮೀಪದ ಬಾವಿಯಲ್ಲಿ 20 ವರ್ಷದ ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಅಣ್ಣ ಸೇರಿದಂತೆ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೃತನನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಉದ್ಯೋಗ ನಿಮಿತ್ತ ಮಂಗಳೂರಿಗೆ ಬಂದಿದ್ದ ಅವರು ಚೊಕ್ಕಬೆಟ್ಟು ಮಠದ ಸಮೀಪ ರೇಖಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕೂಲಿ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಮಲ್ಲಿಕಾರ್ಜುನ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಪ್ರಕರಣವಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನೊಂದಿಗೆ ಅದೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರ ಅಣ್ಣ ಸೋಮನಾಥ್ (21)ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಸೋಮನಾಥ್ ಪ್ರಮುಖ ಶಂಕಿತನಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಇದೇ ವೇಳೆ, ತನಿಖೆಯ ಭಾಗವಾಗಿ ಪಕ್ಕದ ಮನೆಯ ಮತ್ತೋರ್ವ ಯುವಕನನ್ನೂ ಸುರತ್ಕಲ್ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವೈಯಕ್ತಿಕ ವೈಷಮ್ಯ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ವಿಚಾರಣೆ ಬಳಿಕ ಪ್ರಕರಣದ ನಿಖರ ಹಿನ್ನೆಲೆ ಬೆಳಕಿಗೆ ಬರುವ ಸಾಧ್ಯತೆಯಿದೆ.


Spread the love

Exit mobile version