ನಾಟೆಕಲ್ ತಿರುವಿನಲ್ಲಿ ಕಾಲೇಜು ಬಸ್ ಅಪಘಾತ: ಬೈಕ್ ಸವಾರ ಗಂಭೀರ ಗಾಯ
ಮಂಗಳೂರು: ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ದ್ವಿಚಕ್ರ ವಾಹನವನ್ನು ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ನಡೆದಿದೆ.
ಅಪಘಾತದಲ್ಲಿ ಬಸ್ನಲ್ಲಿದ್ದ ವಿದ್ಯಾರ್ಥಿಗಳು ಚಿಕ್ಕಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ದ್ವಿಚಕ್ರ ವಾಹನ ಸವಾರ ಕೆಲಕಾಲ ಬಸ್ನಡಿ ಸಿಲುಕಿಕೊಂಡಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಕ್ರೇನ್ ತರಿಸಿ ಬಸ್ನ್ನು ಮೇಲಕ್ಕೆತ್ತಿ ಸವಾರನನ್ನು ಹೊರತೆಗೆದರು.ಗಂಭೀರ ಗಾಯಗೊಂಡ ಸವಾರನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಯಿತು. ಪ್ರಕರಣ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
