ಗ್ರಾಹಕ ನ್ಯಾಯಾಲಯದ ಆದೇಶ ಪಾಲಿಸದ ಆರೋಪ: ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ
ಉಡುಪಿ: ಗ್ರಾಹಕ ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದೇ ಇದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ..
ಸಂತೋಷ್ ಪೈ ಎಂಬವರು ಅಮೃತ್ ಶೆಣೈ ವಿರುದ್ಧ ಉಡುಪಿ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗದ (District Consumer Disputes Redressal Commission) ಮುಂದೆ ದಾವೆ ಹೂಡಿದ್ದರು. ಈ ಪ್ರಕರಣವು ಸಿ.ಸಿ. ನಂ. 76/2023ರಂತೆ ವಿಚಾರಣೆಗೆ ಒಳಪಟ್ಟಿದ್ದು, ವೈಗರ್ ಅಪಾರ್ಟ್ಮೆಂಟ್ನಲ್ಲಿರುವ ಮನೆ ನಂ. 304 ಅನ್ನು ದಾವೆದಾರರ ಹೆಸರಿಗೆ ನೋಂದಣಿ ಮಾಡಿಕೊಡಬೇಕು ಅಥವಾ ಪರ್ಯಾಯವಾಗಿ ರೂ. 27.20 ಲಕ್ಷ ಮೊತ್ತವನ್ನು ವಾರ್ಷಿಕ ಶೇ.9ರ ಬಡ್ಡಿದರದೊಂದಿಗೆ ಪಾವತಿಸಬೇಕು ಎಂದು ಆಯೋಗ ಆದೇಶಿಸಿತ್ತು.
ಆದರೆ, ಆಯೋಗದ ಆದೇಶವನ್ನು ಎದ್ರಿದಾರ ಅಮೃತ್ ಶೆಣೈ ಪಾಲಿಸದ ಹಿನ್ನೆಲೆಯಲ್ಲಿ ಸಂತೋಷ್ ಪೈ ಅವರು ಎಕ್ಸಿಕ್ಯೂಷನ್ ಕೇಸ್ ನಂ. 31/2024 ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಆಯೋಗವು, ಎದ್ರಿದಾರರು ಉದ್ದೇಶಪೂರ್ವಕವಾಗಿ ಆದೇಶವನ್ನು ಪಾಲಿಸದೇ ಗ್ರಾಹಕ ಸಂರಕ್ಷಣಾ ಕಾಯ್ದೆ-2019ರ ಸೆಕ್ಷನ್ 72ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆ ಎಂದು ಪರಿಗಣಿಸಿ, ಜೂನ್ 24ರಂದು ಆರೋಪಿಗೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ, ರೂ.1 ಲಕ್ಷ ದಂಡ ಹಾಗೂ ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಇದೇ ವೇಳೆ ಆರೋಪಿಯನ್ನು ಆಯೋಗದ ಮುಂದೆ ಹಾಜರುಪಡಿಸುವಂತೆ ಬಂಧನ ವಾರಂಟ್ ಜಾರಿಗೊಳಿಸಲಾಗಿತ್ತು. ಅದರಂತೆ ಜೂನ್ 25ರಂದು ಅಮೃತ್ ಶೆಣೈ ಅವರನ್ನು ಆಯೋಗದ ಮುಂದೆ ಹಾಜರುಪಡಿಸಲಾಯಿತು.
ವಿಚಾರಣೆ ನಡೆಸಿದ ಆಯೋಗವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಬಳಿಕ ಅವರನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
