ಭ್ರಷ್ಟಚಾರ ಆರೋಪ ಹೊತ್ತಿರುವ ಅಬಕಾರಿ ಸಚಿವರು ರಾಜೀನಾಮೆ ನೀಡಲಿ: ಪ್ರತಾಪಸಿಂಹ ನಾಯಕ್
ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದಲೇ ಮುಖ್ಯಮಂತ್ರಿ ಹಾದಿಯಾಗಿ ಇಡೀ ಮಂತ್ರಿಮಂಡಲ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರ ರಕ್ಷಣೆಯಲ್ಲಿ ತೊಡಗಿದೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬಕಾರಿ ಡಿಸಿಯ ಆಡಿಯೋದಲ್ಲಿ ಸಚಿವರಿಗೆ ಒಂದು ಕೋಟಿ ಲಂಚ ಕೊಡಬೇಕಿದೆ ಎಂಬುವುದು ಸ್ಪಷ್ಟವಾಗಿದೆ. ಸಚಿವರು ಸಾಕ್ಷಿ ಕೇಳುತ್ತಿದ್ದಾರೆ. ಆದರೆ ಭ್ರಷ್ಟಾಚಾರ ಮಾಡುವವರು ಸಾಕ್ಷಿ ಸೃಷ್ಟಿಸಿ ಭ್ರಷ್ಟಾಚಾರ ಮಾಡಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ. ಅಧಿಕಾರಿಗಳ ಮೇಲೆ ದರ್ಪ ಮಿತಿಮೀರಿದ್ದು, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಸರಕಾರದ ಅವ್ಯವಹಾರ, ಅನಾಚಾರ ಮೀತಿ ಮೀರಿದ್ದು, ಜನರು ಸರಕಾರವನ್ನು ಇಳಿಸಲು ಕಾಯುತ್ತಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಸುಳ್ಳು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಗ್ಯಾರಂಟಿ ಯೋಜನೆ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ಸೋತಿದೆ ಎಂದು ಅವರು ದೂರಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಶ್ರೀಕಾಂತ್ ನಾಯಕ್, ದಿವಾಕರ ಶೆಟ್ಟಿ, ಶಿವಪ್ರಸಾದ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.













