ಶಿರ್ವ| ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ವಂಚನೆ; ಮೂವರು ಆರೋಪಿಗಳ ಬಂಧನ

Spread the love

ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ವಂಚನೆ; ಮೂವರು ಆರೋಪಿಗಳ ಬಂಧನ

ಉಡುಪಿ: ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಮಹಮ್ಮದ್ ರಿಯಾಜ್ (26), ಕೋಟೆಕಾರ್ ನಿವಾಸಿ, ಮಹಮ್ಮದ್ ಅಫ್ರಾಜ್ (23), ಶಿರ್ವ ನಿವಾಸಿ ಹಾಗೂ ಆಶಿಲ್ (21), ಅಂಬಾಗಿಲು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಫೋರ್ಡ್ ಇಕೋಸ್ಪೋರ್ಟ್ ಕಾರು (KA-14-MB-8452) ವಶಪಡಿಸಿಕೊಳ್ಳಲಾಗಿದೆ.

ಜೂನ್ 27ರಂದು ರಾತ್ರಿ 9.10ರ ಸುಮಾರಿಗೆ ಕಾರ್ಕಳ ತಾಲೂಕಿನ ಕುರ್ಕಾಲು ಗ್ರಾಮದ ಸುಭಾಸ್ ನಗರದಲ್ಲಿರುವ ಫಿಲ್ಲಿಂಗ್ ಸ್ಟೇಷನ್ ಫ್ಯೂಯೆಲ್ ಬಂಕ್‌ಗೆ KA-14-MB-8452 ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ ಕಾರಿನಲ್ಲಿ ಮೂವರು ಬಂದಿದ್ದರು. ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸಿಬ್ಬಂದಿ ಶಶಾಂಕ್ ಅವರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸುವಂತೆ ಸೂಚಿಸಿದ್ದು, ₹4,711.09 ಮೌಲ್ಯದ ಡೀಸೆಲ್ ತುಂಬಿಸಲಾಗಿದೆ.

ಬಳಿಕ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿಸುವುದಾಗಿ ಹೇಳಿ, ಬಿಲ್ ನೀಡುವಂತೆ ಸಿಬ್ಬಂದಿಗೆ ಸೂಚಿಸಿದ್ದರು. ಸಿಬ್ಬಂದಿ ಬಿಲ್ ತೆಗೆಯುವಷ್ಟರಲ್ಲಿ ಹಣ ಪಾವತಿಸದೆ ಕಾರನ್ನು ಚಲಾಯಿಸಿಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 56/2026ರಡಿ ಬಿಎನ್‌ಎಸ್ 2023ರ ಕಲಂ 316(2) ಮತ್ತು 318(4) ಅನ್ವಯ ಪ್ರಕರಣ ದಾಖಲಾಗಿತ್ತು.

ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ಹಾಗೂ ಕಾಪು ವೃತ್ತ ಪೊಲೀಸ್ ನಿರೀಕ್ಷಕ ಅಝಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮಂಜುನಾಥ ಮರಬದ, ಲೋಹಿತ್ ಕುಮಾರ್ ಸಿ.ಎಸ್. ಹಾಗೂ ಸಿಬ್ಬಂದಿಗಳಾದ ಹರ್ಷ ಭಟ್, ಬಸವರಾಜ, ದರಿಯಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಬಂಧಿಸಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಇದೇ ರೀತಿಯ ವಂಚನೆ ಕೃತ್ಯಗಳನ್ನು ಬೇರೆಡೆಗಳಲ್ಲಿ ಎಸಗಿರುವ ಕುರಿತು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.


Spread the love
Subscribe
Notify of

0 Comments