ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ : ಯಶ್ಪಾಲ್ ಸುವರ್ಣ
ಉಡುಪಿ: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಪೂರೈಕೆ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ರವರು ತಮ್ಮ ಕಚೇರಿಯಲ್ಲಿ ಟೈಲರಿಂಗ್ ಮಿಷನ್, ಮರಗೆಲಸ, ಗಾರೆ ಕೆಲಸ, ಎಲೆಕ್ಟ್ರಿಷಿಯನ್, ಬ್ಯೂಟಿಪಾರ್ಲರ್ ಕಿಟ್ ಗಳನ್ನು 55 ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ವಿತರಿಸಿದರು.
ಕಿಟ್ ಗಳನ್ನು ವಿತರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಈ ಯೋಜನೆಗಳ ಮೂಲಕ ಆಯಾ ವೃತ್ತಿಯಲ್ಲಿ ತೊಡಗಿರುವವರಿಗೆ ಅಗತ್ಯವಾದ ಕಿಟ್ ಗಳನ್ನು ನೀಡಲಾಗಿದ್ದು, ಇದರಿಂದ ಜನರ ಉದ್ಯೋಗದಲ್ಲಿ ಸ್ಥಿರತೆ ಹಾಗೂ ಆದಾಯ ಹೆಚ್ಚಳಕ್ಕೆ ಸಹಾಯವಾಗಲಿದೆ. ಹಲವರು ತಮ್ಮ ಜೀವನೋಪಾಯವನ್ನು ಸುಧಾರಿಸಿಕೊಳ್ಳಲು ಈ ಯೋಜನೆಗಳ ನೆರವು ಪ್ರಮುಖವಾಗಲಿದೆ. ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಇಂತಹ ಯೋಜನೆಗಳನ್ನು ಸರಕಾರ ಜಾರಿಗೆ ತಂದಿದ್ದು ಜನರು ಈ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು ಎಂದರು.
ಇದೇ ಸಂದರ್ಭದಲ್ಲಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ಶ್ರೀ ಕೃಷ್ಣ ಪೂಜಾರಿ ರವರಿಗೆ ಕೃತಕ ಕಾಲು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಾಂತರ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರಾದ ಜಿ. ವಾಮನ ನಾಯಕ್, ಹಂದಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶ್ರೀಮತಿ ಶೋಭಾ, ಶ್ರೀಮತಿ ಲಲಿತಾ ಬಾಯಿ ನಿವೃತ್ತ ಶಿಕ್ಷಕರು, ಕೆಂಜೂರು ಶಾಲೆಯ ಮುಖ್ಯ ಶಿಕ್ಷಕರಾದ ಕೆ. ಶಾಂತಾರಾಮ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.
