ವಿದ್ಯಾರ್ಥಿಗಳ ಮುಖವಾಡ ತೊಟ್ಟು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾದವರ ಪರವಾಗಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ ನಾಚಿಕೆಗೇಡು : ದಿನೇಶ್ ಅಮೀನ್
ಉಡುಪಿ ಕಾಂಗ್ರೆಸ್ ನಾಯಕರು ತಮ್ಮ ನಾಯಕರನ್ನು ಮೆಚ್ಚಿಸುವ ಭರದಲ್ಲಿ ವಿದ್ಯಾರ್ಥಿಗಳ ಮುಖವಾಡ ಧರಿಸಿ ದೇಶದಲ್ಲಿ ಆಂತರಿಕ ಭದ್ರತೆಗೆ ಧಕ್ಕೆ ತಂದು ಅರಾಜಕತೆ ಸೃಷ್ಟಿಸಲು ಮುಂದಾಗಿರುವ ಜಿರಳೆ ಪಕ್ಷದ ಪರವಾಗಿ ಉಡುಪಿ ಕಾಂಗ್ರೆಸ್ ನಾಯಕರು ರಸ್ತೆ ತಡೆ ನಡೆಸುತ್ತಿರುವುದು ನಾಚಿಕೆಗೇಡು ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀಟ್ ಪರೀಕ್ಷೆಯ ವಿದ್ಯಾರ್ಥಿಗಳ ವಿಚಾರವನ್ನು ತಮ್ಮ ರಾಜಕೀಯಕ್ಕಾಗಿ ಬಳಸಿ ದೇಶದ ಶಕ್ತಿ ಸೌಧ ಸಂಸತ್ ಭವನಕ್ಕೆ ಮುತ್ತಿಗೆ ಹಾಕಿ ಪೊಲೀಸರ ಮೇಲೆ ಧಾಳಿ ಮಾಡಿ ದಂಗೆ ನಡೆಸಲು ಮುಂದಾದಾಗ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಕಿಡಿಗೇಡಿಗಳ ಮೇಲೆ ಪೋಲೀಸರು ದಿಟ್ಟ ಕ್ರಮ ಕೈಗೊಂಡಿದ್ದಾರೆ. ಕೇವಲ ರಾಜಕೀಯ ಉದ್ದೇಶಕ್ಕಾಗಿ ರಮೇಶ್ ಕಾಂಚನ್ ಬಿಟ್ಟಿ ಪ್ರಚಾರಕ್ಕಾಗಿ ಪತ್ರಿಕಾ ಹೇಳಿಕೆ ನೀಡಿ, ಪ್ರತಿಭಟನೆಯ ನಾಟಕ ವಾಡುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು ಸರ್ಕಾರಿ ಕಚೇರಿಗಳು ಭ್ರಷ್ಟಾಚಾರದ ಕೇಂದ್ರಗಳಾಗಿವೆ. ಕಾಂಗ್ರೆಸ್ ಮುಖಂಡರು ಅಧಿಕಾರಿಗಳೊಂದಿಗೆ ಶಾಮೀಲಾಗಿ ಸಾರ್ವಜನಿಕರ ರಕ್ತ ಹೀರುತ್ತಿದ್ದಾರೆ. ಈ ಬಗ್ಗೆ ಯಾವುದೇ ದನಿ ಎತ್ತದ ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿರುವ ಹಾಗೆ ಉಡುಪಿ ಕಾಂಗ್ರೆಸಿಗರು ಜಾಣ ಕುರುಡು ಮಾಡುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಫುಟ್ ಪಾತ್ ತೆರವು ಕಾರ್ಯಾಚರಣೆ ಮುಂದಾದ ಅಧಿಕಾರಿಗಳ ಜೊತೆ ಶಿವಾಜಿ ನಗರದಲ್ಲಿ ಮಾರಣಾಂತಿಕ ಹಲ್ಲೆ, ಕೊಲೆ, ಹಲ್ಲೆ ಅಪರಾಧ ಕೃತ್ಯಗಳು ಎಲ್ಲೆ ಮೀರಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಬಗ್ಗೆ ಕಾಂಗ್ರೆಸ್ ಮುಖಂಡರು ಚಕಾರ ಎತ್ತುತ್ತಿಲ್ಲ.
ದೇಶದ್ರೋಹಿಗಳ ಪಾಲಿಗೆ ಸಿಂಹ ಸ್ವಪ್ನವಾಗಿರುವ ನರೇಂದ್ರ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ದೇಶದಲ್ಲಿ ಆಂತರಿಕ ಭದ್ರತೆಗೆ ಸವಾಲು ಹಾಕಿರುವ ಜಿರಳೆ ಪಕ್ಷದೊಂದಿಗೆ ಕೈಜೋಡಿಸಿರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ಉಡುಪಿ ಜನತೆ ಶೀಘ್ರದಲ್ಲೇ “ಹಿಟ್” ಸ್ಪ್ರೇ ಮಾಡಿ ಕಿತ್ತೆಸೆಯಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.













