ಕೊಡವೂರು ದೇವಸ್ಥಾನದಲ್ಲಿ ಮಹಾರುದ್ರಯಾಗದ ಧಾರ್ಮಿಕ ಕಾರ್ಯಕ್ರಮಗಳು ಆರಂಭ

Spread the love

ಕೊಡವೂರು ದೇವಸ್ಥಾನದಲ್ಲಿ ಮಹಾರುದ್ರಯಾಗದ ಧಾರ್ಮಿಕ ಕಾರ್ಯಕ್ರಮಗಳು ಆರಂಭ

ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿವೆ.

ಯಾಗದ ಅಂಗವಾಗಿ ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ದೇವಾಲಯದ ಮುಂಭಾಗದಲ್ಲಿ ಬೃಹತ್ ಅಗ್ನಿಕುಂಡ ನಿರ್ಮಿಸಲಾಗಿದೆ. ಚಿತ್ತಾರದ ರಂಗೋಲಿ ಮೂಲಕ ಹೋಮಕುಂಡವನ್ನು ಆಕರ್ಷಕವಾಗಿ ಸಿಂಗರಿಸಲಾಗಿದೆ.

ವೇದಮೂರ್ತಿ ಹಯವದನ ತಂತ್ರಿಗಳು ಪುತ್ತೂರು, ಮಧುಸೂದನ ತಂತ್ರಿಗಳು, ಸುಬ್ರಹ್ಮಣ್ಯ ಭಟ್ ಹಾಗೂ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ಮಹಾರುದ್ರಯಾಗದ ವಿಧಿವಿಧಾನಗಳು ನೆರವೇರಲಿವೆ. ದುರ್ಗೆಯ ಸನ್ನಿಧಿಯಲ್ಲಿ ದುರ್ಗಾಯಾಗವೂ ನಡೆಯಲಿದೆ. ಬಳಿಕ ಕಲಶಾಭಿಷೇಕ, ಪಲ್ಲಪೂಜೆ ಹಾಗೂ ಮಹಾಪೂಜೆ ಜರುಗಲಿದೆ.

ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿದ್ದು, ಹತ್ತು ಸಾವಿರಕ್ಕೂ ಅಧಿಕ ಭಕ್ತರಿಗೆ ಭೋಜನ ವ್ಯವಸ್ಥೆ ಮಾಡಲಾಗಿದೆ. ಸಂಜೆ ದೀಪಾರಾಧನೆ, ಪೂರ್ವಕರಂಗ ಪೂಜೆ ಹಾಗೂ ರಂಗಪೂಜೆ ಬಲಿ ಕಾರ್ಯಕ್ರಮಗಳು ನಡೆಯಲಿವೆ.

ಸಮಾರೋಪ ಸಮಾರಂಭದಲ್ಲಿ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬಳಿಕ ಕಲರ್ಸ್ ಕನ್ನಡ ಖ್ಯಾತಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡ ಗಾನ ಗಂಧರ್ವ ಬಿರುದಾಂಕಿತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದಿಂದ ‘ಶಿವಗಾನ ಭಕ್ತಿ ಸಂಭ್ರಮ’ ಕಾರ್ಯಕ್ರಮ ಜರುಗಲಿದೆ.

ಇದೇ ವೇಳೆ ಶ್ರೀ ಅನಂತ ಪದ್ಮನಾಭ ಯಕ್ಷಗಾನ ಮಂಡಳಿ, ಪೆರ್ಡೂರು ಮೇಳದವರಿಂದ ‘ಶ್ವೇತ ಕುಮಾರ ಚರಿತ್ರೆ’ ಯಕ್ಷಗಾನ ಬಯಲಾಟ (ಕಾಲಮಿತಿ) ಪ್ರದರ್ಶನಗೊಳ್ಳಲಿದೆ.

ಮಹಾಯಾಗದ ಪೂರ್ಣಾಹುತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments