ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ

Spread the love

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಹಣಕಾಸು ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ: ಸ್ಯಾಮ್ ಪೀಟರ್ @ ಡ್ಯಾನಿ ತಾರಕನ್ @ ಆಂಟನಿ (64), ಮರಿಯಾ ಕಾಟೇಜ್, ಕವನಾಡು, ಕೊಲ್ಲಂ, ಕೇರಳ ರಾಜ್ಯದ ನಿವಾಸಿ. ಪ್ರಸ್ತುತ ಉತ್ತರ ಪ್ರದೇಶದ ಲಕ್ನೋದಲ್ಲಿರುವ ವಿಳಾಸದಲ್ಲಿ ವಾಸವಾಗಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಶ್ಯಾಮ್ ಪೀಟರ್ ಅಲಿಯಾಸ್ ಟಿ. ಸ್ಯಾಮ್ ಪೀಟರ್/ರಾಹುಲ್ ಪೀಟರ್ ತನ್ನದೇ ಗ್ಯಾಂಗ್ ರಚಿಸಿಕೊಂಡು, ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ ಎನ್ನಲಾಗಿದೆ. ಹಣಕಾಸು ವಿವಾದಗಳು, ಬ್ಯಾಂಕ್ ವಂಚನೆ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ತಾನು ಅಧಿಕಾರ ಹೊಂದಿರುವ ಅಧಿಕಾರಿಯೆಂದು ನಂಬಿಸಿ ಅವರಿಂದ ಹಣ ಪಡೆದು ವಂಚನೆ ಮತ್ತು ಸುಲಿಗೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ 2019ರ ಆಗಸ್ಟ್ 16ರಂದು ಮಂಗಳೂರು ಕದ್ರಿ ಪೊಲೀಸರು ಪಂಪ್‌ವೆಲ್‌ನಲ್ಲಿರುವ ಲಾಡ್ಜ್‌ವೊಂದರ ಮೇಲೆ ಕಾರ್ಯಾಚರಣೆ ನಡೆಸಿ, ಶ್ಯಾಮ್ ಪೀಟರ್ ಸೇರಿದಂತೆ ಆತನ ಗ್ಯಾಂಗ್‌ನ ಎಂಟು ಸದಸ್ಯರನ್ನು ಬಂಧಿಸಿದ್ದರು. ಬಳಿಕ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ. ಆದರೆ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ತನ್ನ ನೈಜ ಗುರುತನ್ನು ಮರೆಮಾಚುವ ಉದ್ದೇಶದಿಂದ ಆರೋಪಿ ವಿವಿಧ ರಾಜ್ಯಗಳಲ್ಲಿ ವಿವಿಧ ಹೆಸರುಗಳನ್ನು ಬಳಸಿಕೊಂಡು ವಾಸಿಸುತ್ತಿದ್ದನೆಂದು ತನಿಖೆಯಿಂದ ತಿಳಿದುಬಂದಿದೆ.

ಆಂಟನಿ, ರಾಹುಲ್ ಪೀಟರ್, ಸ್ಯಾಮ್ ಪೀಟರ್, ರಾಜೇಶ್ ರಾಬಿನ್ಸನ್, ರೀತು ರಿಚರ್ಡ್, ರಾಯ್ ಜೇಕಬ್, ರಾಬಿನ್ ರಿಚರ್ಡ್ಸನ್, ರಾಬಿನ್ ಸನ್, ಆಂಟೋನಿ ಪ್ರಾನ್ಸಿಸ್, ಶಾರೂನ್ ಪ್ರಾನ್ಸಿಸ್ ಹಾಗೂ ಪ್ರಸ್ತುತ ಡ್ಯಾನಿ ತಾರಕನ್ ಸೇರಿದಂತೆ ಹಲವು ಹೆಸರುಗಳನ್ನು ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಒಂದು ಸ್ಥಳದಲ್ಲಿ ಅಪರಾಧ ಎಸಗಿದ ಬಳಿಕ ಮತ್ತೊಂದು ಸ್ಥಳಕ್ಕೆ ತೆರಳಿ ಹೆಸರು ಬದಲಿಸಿಕೊಂಡು ವಾಸಿಸುವ ಪ್ರವೃತ್ತಿಯನ್ನು ಆರೋಪಿ ಹೊಂದಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸ್ಯಾಮ್ ಪೀಟರ್ ಕುಖ್ಯಾತ ವಂಚಕನಾಗಿದ್ದು, ‘ರಾಹುಲ್ ಪೀಟರ್’ ಎಂಬ ಅಲಿಯಾಸ್ ಹೆಸರಿನಲ್ಲಿ ಆತನ ವಿರುದ್ಧ 2001ರಿಂದ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಕೊಣಾಜೆ ಪೊಲೀಸ್ ಠಾಣೆ, ಚಿಕ್ಕಬಳ್ಳಾಪುರ, ಬೆಂಗಳೂರು, ಉಡುಪಿ ನಗರ ಹಾಗೂ ಕುಶಾಲನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಬಿಹಾರ, ತಮಿಳುನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿಯೂ ಮೋಸ ಮತ್ತು ವಂಚನೆ ಸೇರಿದಂತೆ ಸುಮಾರು 17 ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಮಂಗಳೂರು ಉಳ್ಳಾಲ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿಯ ವಿರುದ್ಧ 17 ಬಾರಿ ವಾರೆಂಟ್ ಹೊರಡಿಸಲಾಗಿತ್ತು. ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪ್ರಕರಣದಲ್ಲಿ 14 ಬಾರಿ ವಾರೆಂಟ್ ಹೊರಡಿಸಿದ ಬಳಿಕ ಪ್ರೊಕ್ಲಮೇಷನ್ (ಉದ್ಘೋಷಣೆ) ಹೊರಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಆರೋಪಿಯ ಪತ್ತೆ ಮತ್ತು ಬಂಧನ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.


Spread the love
Subscribe
Notify of

0 Comments