ಮಂಗಳೂರು| ಶಾಲಾ ಮಕ್ಕಳ ಸುರಕ್ಷತೆ: ಬಸ್ ಚಾಲಕರು, ನಿರ್ವಾಹಕರು ಹಾಗೂ ಆಡಳಿತ ಮಂಡಳಿಗೆ ಜಾಗೃತಿ
ಮಂಗಳೂರು: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಶಾಲಾ ಬಸ್ ಚಾಲಕರು, ನಿರ್ವಾಹಕರು, ಮಾಲೀಕರು ಹಾಗೂ ಶಾಲಾ ಆಡಳಿತ ಮಂಡಳಿಯವರಿಗೆ ಮಂಗಳೂರು ನಗರ ಸಂಚಾರ ಪೊಲೀಸ್ ವತಿಯಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಬುಧವಾರ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ನಗರದ ವಿವಿಧ ಶಾಲೆಗಳ ಸುಮಾರು 600 ಮಂದಿ ಶಾಲಾ ಬಸ್ ಚಾಲಕರು, ಮಾಲೀಕರು, ಬಸ್ ಮ್ಯಾನೇಜರ್ಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಪ್ರತಿನಿಧಿಗಳು ಭಾಗವಹಿಸಿದ್ದರು.
ಶಾಲಾ ಮಕ್ಕಳ ಸುರಕ್ಷಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಚಾಲಕರು ಹಾಗೂ ನಿರ್ವಾಹಕರು ಕಡ್ಡಾಯವಾಗಿ ಪಾಲಿಸಬೇಕಾದ ಕಾನೂನು ನಿಯಮಗಳು, ರಸ್ತೆ ಸುರಕ್ಷತಾ ಕ್ರಮಗಳು, ಸಂಚಾರ ನಿಯಮಗಳು ಹಾಗೂ ಮಕ್ಕಳ ಸುರಕ್ಷತೆಯ ಕುರಿತಾದ ತಮ್ಮ ಜವಾಬ್ದಾರಿಗಳ ಬಗ್ಗೆ ಕಾರ್ಯಕ್ರಮದಲ್ಲಿ ಸಮಗ್ರವಾಗಿ ಮಾಹಿತಿ ನೀಡಲಾಯಿತು. ಶಾಲಾ ವಾಹನಗಳನ್ನು ಚಲಾಯಿಸುವ ಸಂದರ್ಭದಲ್ಲಿ ಚಾಲಕರು ಅತ್ಯಂತ ಎಚ್ಚರಿಕೆ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.
ಶಾಲಾ ಆಡಳಿತ ಮಂಡಳಿಯವರು ಶಾಲಾ ವಾಹನಗಳಿಗೆ ಸಂಬಂಧಿಸಿದ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೆ, ಚಾಲಕರು ಹಾಗೂ ನಿರ್ವಾಹಕರು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಮಕ್ಕಳ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದರು. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಶಾಲಾ ಬಸ್ ಚಾಲಕರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

ಕಾರ್ಯಕ್ರಮದ ಸಂದರ್ಭದಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಪಾಲನೆಯ ಕುರಿತು ಭಾಗವಹಿಸಿದ್ದವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಪಿ (ಅಪರಾಧ ಮತ್ತು ಸಂಚಾರ), Karnataka Motor Vehicles (Condition for Vehicle engaged in transport of school Children) Rules, 2012ರನ್ವಯ ಶಾಲಾ ವಾಹನಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು. ಶಾಲೆ ಹಾಗೂ ಕಾಲೇಜುಗಳ School Cab Safety Committee ವತಿಯಿಂದ ವಾಹನ ಮತ್ತು ಚಾಲಕರ ನೈಜ ದಾಖಲೆಗಳು, ವಾಹನದ ಫಿಟ್ನೆಸ್, ವಿಮೆ, ಅಗ್ನಿಶಾಮಕ ಉಪಕರಣ, ಸ್ಪೀಡ್ ಗವರ್ನರ್ ಹಾಗೂ ಕ್ಲೋಸ್ಡ್ ಬಾಡಿ ಸೇರಿದಂತೆ ಅಗತ್ಯ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.
ಶಾಲಾ ವಾಹನಗಳು ಗರಿಷ್ಠ 40 ಕಿ.ಮೀ. ವೇಗದಲ್ಲಿ ಸಂಚರಿಸುವಂತೆ ಹಾಗೂ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದರು.
ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಮಾತನಾಡಿ, ಮಕ್ಕಳನ್ನು ಸಾಗಿಸಲು ಕಡ್ಡಾಯವಾಗಿ ಮಾನ್ಯ ಪರ್ಮಿಟ್ ಹೊಂದಿರುವ ವಾಹನಗಳನ್ನೇ ಬಳಸಬೇಕು. ವಾಹನಗಳ ದಾಖಲೆಗಳು ಹಾಗೂ ಸುರಕ್ಷತಾ ಮಾನದಂಡಗಳನ್ನು ಸರಿಯಾಗಿ ನಿರ್ವಹಿಸುವುದರ ಜೊತೆಗೆ ಮಕ್ಕಳ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲಾ ಆಡಳಿತ ಮಂಡಳಿಯವರಿಗೆ ಮಕ್ಕಳ ಸುರಕ್ಷತೆಯ ಕುರಿತು ನಿಯಮಿತವಾಗಿ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು. ಶಿಕ್ಷಕರು, ಶಾಲಾ ಬಸ್ ಮಾಲೀಕರು, ಚಾಲಕರು ಹಾಗೂ ಪೋಷಕರ ಸಭೆಗಳನ್ನು ಆಗಾಗ ನಡೆಸಿ, ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಎಸಿಪಿ ಸಂಚಾರ ಉಪವಿಭಾಗ ಅವರು ಮಾತನಾಡಿ, ಶಾಲಾ ಬಸ್ ಚಾಲಕರು ಸಂಚಾರ ನಿಯಮಗಳನ್ನು ಪಾಲಿಸುವುದರ ಜೊತೆಗೆ ಶಿಸ್ತು, ತಾಳ್ಮೆ ಹಾಗೂ ಜವಾಬ್ದಾರಿಯಿಂದ ವಾಹನ ಚಲಾಯಿಸಬೇಕು. ಮಕ್ಕಳ ಸುರಕ್ಷತೆಯನ್ನು ಎಲ್ಲಕ್ಕಿಂತ ಹೆಚ್ಚಿನ ಆದ್ಯತೆಯಾಗಿ ಪರಿಗಣಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ನಗರ ಸಂಚಾರ ಪೊಲೀಸ್ ಠಾಣೆಗಳ ಎಲ್ಲಾ ಠಾಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.













