ಮಣಿಪಾಲ: ರೌಡಿ ಗಣೇಶ್ ಗೂಂಡಾ ಕಾಯ್ದೆಯಡಿ ಬಂಧನ: ಕಲಬುರ್ಗಿಯ ಕೇಂದ್ರ ಕಾರಾಗೃಹಕ್ಕೆ ರವಾನೆ
ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ (32) ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಆತನನ್ನು ಬಂಧಿಸಿ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಜಿಲ್ಲಾಡಳಿತ ಆದೇಶಿಸಿದೆ.
ಬಡಗಬೆಟ್ಟು ಗ್ರಾಮದ ನೇತಾಜಿನಗರ 4ನೇ ಅಡ್ಡರಸ್ತೆ ನಿವಾಸಿಯಾಗಿರುವ ಗಣೇಶ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಕಳ್ಳತನ ಸೇರಿದಂತೆ ಒಟ್ಟು ಒಂಭತ್ತು ಪ್ರಕರಣಗಳು ದಾಖಲಾಗಿವೆ.
ಈ ಪೈಕಿ ಮೂರು ಪ್ರಕರಣಗಳಲ್ಲಿ ಖುಲಾಸೆಯಾಗಿದ್ದು, ನಾಲ್ಕು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ. ಉಳಿದ ಎರಡು ಪ್ರಕರಣಗಳ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅವರು ಸೋಮವಾರ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಅದರಂತೆ ಆರೋಪಿಯನ್ನು ಕಲಬುರ್ಗಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.













