SIR ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು – ಕೆ. ಜಯಪ್ರಕಾಶ್ ಹೆಗ್ಡೆ

Spread the love

SIR ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು – ಕೆ. ಜಯಪ್ರಕಾಶ್ ಹೆಗ್ಡೆ

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ಪ್ರಜೆಯ ಸಂವಿಧಾನ ಬದ್ದ ಹಕ್ಕು. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರ, ಬೂತ್ ಮಟ್ಟದ ಏಜೆಂಟ್ (BLA) ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಕರೆ ನೀಡಿದ್ದಾರೆ.

SIR ಪ್ರಕ್ರಿಯೆಯ ಉದ್ದೇಶ ಮತದಾರರ ಪಟ್ಟಿಯನ್ನು ನಿಖರಗೊಳಿಸುವುದಾಗಿದೆ. ಆದರೆ ಈ ಪ್ರಕ್ರಿಯೆಯ ಬಗ್ಗೆ ಅರಿವಿನ ಕೊರತೆ ಅಥವಾ ನಿರ್ಲಕ್ಷ್ಯ ಉಂಟಾದರೆ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈತಪ್ಪುವುದು, ಹೊಸ ಮತದಾರರು ಸೇರ್ಪಡೆಯಾಗದೆ ಉಳಿಯುವುದು, ಅಗತ್ಯ ತಿದ್ದುಪಡಿಗಳು ಆಗದೆ ಉಳಿಯುವುದು ಅಥವಾ ಅನುಮಾನಾಸ್ಪದ ನೋಂದಣಿಗಳ ಕುರಿತು ಸಮಯಕ್ಕೆ ಆಕ್ಷೇಪಣೆ ಸಲ್ಲಿಕೆಯಾಗದಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕತ್ವವು ತಮ್ಮ BLA ಗಳಿಗೆ ಸಮಗ್ರ ತರಬೇತಿ ನೀಡಿ, Form 6, Form 7 ಹಾಗೂ Form 8 ಗಳ ಬಳಕೆ, ಕರಡು ಮತದಾರರ ಪಟ್ಟಿಯ ಪರಿಶೀಲನೆ, ಆಕ್ಷೇಪಣೆ ಸಲ್ಲಿಸುವ ವಿಧಾನ ಮತ್ತು ನಿಗದಿತ ಕಾಲಮಿತಿಗಳ ಬಗ್ಗೆ ಸಂಪೂರ್ಣ ತಿಳುವಳಿಕೆ ನೀಡಬೇಕು. ಬೂತ್ ಮಟ್ಟದಲ್ಲಿ ಮನೆಮನೆ ಸಂಪರ್ಕ ನಡೆಸಿ ಪ್ರತಿಯೊಬ್ಬ ಮತದಾರರ ಹೆಸರು ಮತ್ತು ವಿವರಗಳನ್ನು ಪರಿಶೀಲಿಸುವ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಜೂನ್ 30 ರಿಂದ ಜುಲೈ 29ರೊಳಗೆ ಪ್ರತಿಯೊಬ್ಬ ಮತದಾರರು ತಮ್ಮ ಬೂತ್ನ BLO ಅವರನ್ನು ಸಂಪರ್ಕಿಸಿ Enumeration Form (EF) ಅನ್ನು ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಿ ಸಲ್ಲಿಸಬೇಕು
ಫಾರ್ಮ್ನಲ್ಲಿ ಕೇಳಲಾಗಿರುವ ವಿವರಗಳನ್ನು ಯಾವುದೇ ತಪ್ಪು ಅಥವಾ ಸುಳ್ಳು ಮಾಹಿತಿಯಿಲ್ಲದೆ ದಾಖಲಿಸುವುದು ಅತ್ಯಂತ ಮುಖ್ಯವಾಗಿದೆ. ಅಗತ್ಯವಿರುವ ಸಂದರ್ಭಗಳಲ್ಲಿ 2002ರ ಮತದಾರರ ಪಟ್ಟಿಯಲ್ಲಿನ ಮತದಾರನ ವಿವರ ಅಥವಾ ಆಗ ಆತ ಮತದಾನದ ಹಕ್ಕು ಪಡೆದಿರದಿದ್ದರೆ ಆತನ ತಂದೆ, ತಾಯಿ ಅಥವಾ ಅಜ್ಜ–ಅಜ್ಜಿಯರ ಮತದಾರರ ವಿವರಗಳನ್ನು ಒದಗಿಸಬೇಕಾಗಬಹುದು. ಆದ್ದರಿಂದ ಚುನಾವಣಾ ಆಯೋಗ ಕೇಳುವ 11 ದಾಖಲೆಗಳಲ್ಲಿ ಲಭ್ಯವಿರುವ ಅಗತ್ಯ ದಾಖಲೆಗಳನ್ನು ಮುಂಚಿತವಾಗಿಯೇ ಸಿದ್ಧವಾಗಿಟ್ಟುಕೊಳ್ಳುವಂತೆ ಅವರು ಮನವಿ ಮಾಡಿದರು.

ಪ್ರತಿಯೊಬ್ಬ ಮತದಾರರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ, ಹೆಸರು, ವಿಳಾಸ, ವಯಸ್ಸು, ಫೋಟೋ ಹಾಗೂ ಇತರ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಬೇಕು. ಯಾವುದೇ ತಪ್ಪು ಕಂಡುಬಂದರೆ ತಕ್ಷಣ ಸಂಬಂಧಿತ ಅರ್ಜಿಗಳ ಮೂಲಕ ತಿದ್ದುಪಡಿ ಮಾಡಿಸಿಕೊಳ್ಳಬೇಕು. SIR ಪ್ರಕ್ರಿಯೆಯಲ್ಲಿ ಅಗತ್ಯ ಕ್ರಮಗಳನ್ನು ನಿರ್ಲಕ್ಷಿಸಿದರೆ ಮತದಾರರ ಪಟ್ಟಿಗೆ ಸಂಬಂಧಿಸಿದ ತೊಂದರೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಭಾಗವಹಿಸಬೇಕು ಎಂದು ಅವರು ಹೇಳಿದರು.

ಬೂತ್ ಮಟ್ಟದ ಏಜೆಂಟ್ಗಳು ಮತದಾರರ ಪಟ್ಟಿಯನ್ನು ನಿರಂತರವಾಗಿ ಪರಿಶೀಲಿಸಿ, ಹೊಸ ಮತದಾರರನ್ನು ಸೇರ್ಪಡೆಗೊಳಿಸಲು ನೆರವಾಗಬೇಕು, ಮೃತರು ಹಾಗೂ ಶಾಶ್ವತವಾಗಿ ಸ್ಥಳಾಂತರಗೊಂಡವರ ವಿವರಗಳನ್ನು ನವೀಕರಿಸಬೇಕು, ಅರ್ಹ ಮತದಾರರ ಹೆಸರುಗಳು ಕೈತಪ್ಪದಂತೆ ಗಮನಹರಿಸಬೇಕು ಹಾಗೂ ಅನುಮಾನಾಸ್ಪದ ಅಥವಾ ಅನರ್ಹ ನೋಂದಣಿಗಳಿದ್ದರೆ ಕಾನೂನುಬದ್ಧವಾಗಿ ಆಕ್ಷೇಪಣೆ ಸಲ್ಲಿಸಬೇಕು ಎಂದು ಅವರು ಹೇಳಿದರು.

ಮತದಾರರ ಪಟ್ಟಿಯ ರಕ್ಷಣೆ ಚುನಾವಣಾ ದಿನದ ಕೆಲಸವಲ್ಲ; ಅದು ನಿರಂತರವಾಗಿ ನಡೆಯಬೇಕಾದ ಸಂಘಟನಾ ಕಾರ್ಯವಾಗಿದೆ. ಬಲವಾದ BLA ವ್ಯವಸ್ಥೆ, ಜಾಗೃತ ಮತದಾರರು ಮತ್ತು ಸಕಾಲಿಕ ಪರಿಶೀಲನೆಯ ಮೂಲಕ ಮಾತ್ರ ಮತದಾರರ ಪಟ್ಟಿಯ ನಿಖರತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

“ಚುನಾವಣೆ ಗೆಲ್ಲುವ ಸಿದ್ಧತೆ ಮತದಾನದ ದಿನ ಆರಂಭವಾಗುವುದಿಲ್ಲ; ಅದು ಮತದಾರರ ಪಟ್ಟಿಯ ರಕ್ಷಣೆಯಿಂದ ಆರಂಭವಾಗುತ್ತದೆ. ಆದ್ದರಿಂದ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯತ್, ವಿಧಾನಸಭಾ ಹಾಗೂ ಲೋಕಸಭಾ ಅಭ್ಯರ್ಥಿ ಆಕಾಂಕ್ಷಿಗಳು, ಪ್ರತಿಯೊಬ್ಬ BLA, ಪ್ರತಿಯೊಬ್ಬ ಕಾರ್ಯಕರ್ತ ಮತ್ತು ಪ್ರತಿಯೊಬ್ಬ ಮತದಾರ SIR ಪ್ರಕ್ರಿಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿ ನಿಖರವಾಗಿರುವಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು” ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಕರೆ ನೀಡಿದ್ದಾರೆ.


Spread the love
Subscribe
Notify of

0 Comments