ಖೋಟಾ ನೋಟು ಮುದ್ರಣ ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು: ಏಳು ಆರೋಪಿಗಳ ಬಂಧನ
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟು ಮುದ್ರಣ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದು, ದಾಳಿ ವೇಳೆ ಏಳು ಆರೋಪಿಗಳನ್ನು ಬಂಧಿಸಿ, ನಕಲಿ ಕರೆನ್ಸಿ ಮುದ್ರಣಕ್ಕೆ ಬಳಸುತ್ತಿದ್ದ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ಭಾರತೀಯ ನಕಲಿ ಕರೆನ್ಸಿ ನೋಟುಗಳನ್ನು ಮುದ್ರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರಿಗೆ ಲಭಿಸಿತ್ತು. ಈ ಮಾಹಿತಿ ಮೇರೆಗೆ ಜುಲೈ 16ರಂದು ಬೆಳಿಗ್ಗೆ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ ಪೊಲೀಸರು ಸ್ಥಳದಲ್ಲಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಇಬ್ರಾಹಿಂ, ಶರೀಪ್, ಸಂದೀಪ್ ಪುಂಡಲಿಕ ಶೋಳಂಬಿ, ಮಹಮ್ಮದ್ ನಬಾಸ್, ಸಲ್ಮಾನ್ ಫಾರೀಸ್, ಸಿರಾಜುದ್ದೀನ್ ಹಾಗೂ ಇರ್ಷಾದ್ ಎಂದು ಗುರುತಿಸಲಾಗಿದೆ.
ದಾಳಿ ವೇಳೆ ₹500 ಮುಖಬೆಲೆಯ ಒಂದು ನಕಲಿ ನೋಟು, ₹500 ಮುಖಬೆಲೆಯ ನೋಟುಗಳ ಮಾದರಿಯಲ್ಲಿರುವ 21 ಎ-4 ಗಾತ್ರದ ಮುದ್ರಿತ ಹಾಳೆಗಳು, ಕಂಪ್ಯೂಟರ್, ಜೆರಾಕ್ಸ್ ಯಂತ್ರ, ವಿವಿಧ ಸೀಲುಗಳು ಸೇರಿದಂತೆ ನಕಲಿ ಕರೆನ್ಸಿ ತಯಾರಿಕೆಗೆ ಬಳಸುತ್ತಿದ್ದ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 103/2026ರಡಿ ಬಿಎನ್ಎಸ್-2023ರ ಕಲಂ 178ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಪ್ರಕರಣದ ತನಿಖೆ ಹಾಗೂ ಖೋಟಾ ನೋಟು ಜಾಲದ ಪತ್ತೆ ಕಾರ್ಯಾಚರಣೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕಿ ಬಿಂದು ಮಣಿ ಆರ್.ಎನ್., ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಕೊಡಗು ಜಿಲ್ಲಾ ಪೊಲೀಸ್ ಸಿಬ್ಬಂದಿ, ದಕ್ಷಿಣ ಕನ್ನಡ ಜಿಲ್ಲಾ ವಿಶೇಷ ಘಟಕದ ಪೊಲೀಸ್ ನಿರೀಕ್ಷಕ ನಂದಕುಮಾರ್ ಹಾಗೂ ಅವರ ತಂಡ ಉಪ್ಪಿನಂಗಡಿ ಪೊಲೀಸರೊಂದಿಗೆ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ.
