ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಬಾಂಗ್ಲಾ ವಲಸಿಗರ ಹಸ್ತಾಂತರಕ್ಕೆ ಸಿದ್ಧತೆ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧೆಡೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದ್ದ 23 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ.
ತಿಂಗಳ ಹಿಂದೆ ಮಂಗಳೂರಿನ ವಿವಿಧೆಡೆ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶಿ ವಲಸಿಗರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಒಟ್ಟು 23 ಮಂದಿಯನ್ನು ವಶಕ್ಕೆ ಪಡೆದಿದ್ದರು.
ಇದೀಗ ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಅವರನ್ನು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಕರೆದೊಯ್ಯಲಾಗುತ್ತಿದೆ.
ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಸುಮಾರು 30 ಮಂದಿ ಪೊಲೀಸರ ತಂಡ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಕರೆದೊಯ್ಯುತ್ತಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳಿರುವ ಪೊಲೀಸ್ ತಂಡ, ಅಲ್ಲಿಂದ ರೈಲಿನ ಮೂಲಕ ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಪ್ರಯಾಣಿಸಿದೆ.
ಆಗಸ್ಟ್ 26ರಂದು ಪಶ್ಚಿಮ ಬಂಗಾಳದಲ್ಲಿರುವ ಭಾರತ–ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್ಎಫ್ (ಗಡಿ ಭದ್ರತಾ ಪಡೆ) ಅಧಿಕಾರಿಗಳಿಗೆ ವಶಕ್ಕೆ ಪಡೆದಿರುವವರನ್ನು ಹಸ್ತಾಂತರಿಸಲು ಮಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಬಿಎಸ್ಎಫ್ ಅಧಿಕಾರಿಗಳು ಅಕ್ರಮ ವಲಸಿಗರನ್ನು ನಿರೀಕ್ಷಣಾ ಕೇಂದ್ರದಲ್ಲಿ ಇರಿಸಲಿದ್ದು, ಅಗತ್ಯ ತಾಂತ್ರಿಕ ಹಾಗೂ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಅವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಸಾಧ್ಯತೆ ಇದೆ.













