Home Mangalorean News Kannada News ರೋಗಿಗಳಿಗೆ ಉತ್ತಮ ಸೇವೆ ಒದಗಿಸುವುದೇ ಮೊದಲ ಆದ್ಯತೆ: ಸಚಿವ ಯು.ಟಿ. ಖಾದರ್

ರೋಗಿಗಳಿಗೆ ಉತ್ತಮ ಸೇವೆ ಒದಗಿಸುವುದೇ ಮೊದಲ ಆದ್ಯತೆ: ಸಚಿವ ಯು.ಟಿ. ಖಾದರ್

Spread the love

ರೋಗಿಗಳಿಗೆ ಉತ್ತಮ ಸೇವೆ ಒದಗಿಸುವುದೇ ಮೊದಲ ಆದ್ಯತೆ: ಸಚಿವ ಯು.ಟಿ. ಖಾದರ್

ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು ತನ್ನ ಮೊದಲ ಆದ್ಯತೆಯಾಗಿದ್ದು, ಆಸ್ಪತ್ರೆಗಳಲ್ಲಿರುವ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಲು ವಿಶೇಷ ಗಮನ ಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ರಾಜ್ಯದ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಅವರು, ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೂರು ವರ್ಷಗಳ ಕಾಲ ವಿಧಾನಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಬಳಿಕ ಇದೀಗ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದು, ಮಂಗಳೂರಿಗೆ ಆಗಮಿಸಿ ಉಳ್ಳಾಲದ ಸಯ್ಯದ್ ಮದನಿ ದರ್ಗಾ, ಸೈಂಟ್ ಸೆಬಾಸ್ಟಿಯನ್ ಚರ್ಚ್ ಹಾಗೂ ಶ್ರೀಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು. ಜನರ ಆಶೀರ್ವಾದ ಮತ್ತು ಸಹಕಾರದೊಂದಿಗೆ ಸೇವೆ ಸಲ್ಲಿಸುವ ಉದ್ದೇಶ ಹೊಂದಿದ್ದು, ಹಿಂದಿನ ಆರೋಗ್ಯ ಸಚಿವರು ಆರಂಭಿಸಿರುವ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದರು.

ಮಧ್ಯರಾತ್ರಿ ಆಸ್ಪತ್ರೆಗಳಿಗೆ ಭೇಟಿ ಅಗತ್ಯ

ಆಸ್ಪತ್ರೆಗಳ ನೈಜ ಸ್ಥಿತಿಗತಿಗಳನ್ನು ತಿಳಿಯಬೇಕಾದರೆ ಮಧ್ಯರಾತ್ರಿ ಭೇಟಿ ನೀಡಬೇಕು ಎಂದು ಅಭಿಪ್ರಾಯಪಟ್ಟ ಸಚಿವರು, ಸರ್ಕಾರಿ ಆಸ್ಪತ್ರೆಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ, ವೈದ್ಯರು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆಯೇ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಸ್ಥಿತಿ ಹೇಗಿದೆ ಎಂಬುದನ್ನು ಖುದ್ದಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಈಗಾಗಲೇ ಆರೋಗ್ಯ ಇಲಾಖೆಯ ಮೊದಲ ಸಭೆ ನಡೆಸಿದ್ದು, ಸೋಮವಾರ ಮಂಗಳೂರಿನಲ್ಲಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿ ತಳಮಟ್ಟದ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ವೈದ್ಯರು ಕರ್ತವ್ಯನಿಷ್ಠೆಯಿಂದ ಕೆಲಸ ಮಾಡಬೇಕು

ಪ್ರತಿಯೊಂದು ಸರ್ಕಾರಿ ಆಸ್ಪತ್ರೆಯಲ್ಲೂ ವೈದ್ಯರು ನಿಗದಿತ ಸಮಯದಲ್ಲಿ ಕರ್ತವ್ಯ ನಿರ್ವಹಿಸಬೇಕು. ಆಸ್ಪತ್ರೆಗಳಲ್ಲಿನ ಸಮಸ್ಯೆಗಳನ್ನು ಗಮನಿಸುವುದು ಕೇವಲ ಸಚಿವರ ಜವಾಬ್ದಾರಿಯಲ್ಲ. ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಆಸ್ಪತ್ರೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಗುರುತಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಈಗಾಗಲೇ ಸೂಚಿಸಲಾಗಿದೆ ಎಂದು ಹೇಳಿದರು.

ವೈದ್ಯರ ಕೊರತೆಗೆ ಪರ್ಯಾಯ ವ್ಯವಸ್ಥೆ

ಕೆಲವು ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳಿದ್ದರೂ ವೈದ್ಯರ ಕೊರತೆ ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ ಹೊರಗಿನ ವೈದ್ಯರ ಸಹಕಾರ ಪಡೆಯುವುದು ತಪ್ಪಲ್ಲ. ತಾಯಿ-ಮಕ್ಕಳ ಆಸ್ಪತ್ರೆಗಳಲ್ಲಿ ಮಕ್ಕಳ ತಜ್ಞರು, ಪ್ರಸೂತಿ ತಜ್ಞರು ಹಾಗೂ ಅರಿವಳಿಕೆ ತಜ್ಞರು ಸೇರಿದಂತೆ ಕನಿಷ್ಠ ಮೂವರು ವೈದ್ಯರು ಅಗತ್ಯವಿರುತ್ತಾರೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ತಜ್ಞ ವೈದ್ಯರ ಅವಶ್ಯಕತೆ ಇದೆ ಎಂದು ಸಚಿವರು ಹೇಳಿದರು.

ಉಳ್ಳಾಲ ಆಸ್ಪತ್ರೆಯ ಉದಾಹರಣೆ ನೀಡಿದ ಅವರು, ಹಿಂದೆ ವೈದ್ಯರ ಕೊರತೆಯಿಂದ ರೋಗಿಗಳ ಸಂಖ್ಯೆ ಕಡಿಮೆಯಾಗಿತ್ತು. ಆದರೆ ಸೂಕ್ತ ಕ್ರಮಗಳಿಂದ ಆ ಸಮಸ್ಯೆಯನ್ನು ಪರಿಹರಿಸಲಾಗಿದ್ದು, ಈಗ ಅಲ್ಲಿ ಅಗತ್ಯ ಸೌಲಭ್ಯಗಳು ಹಾಗೂ ವೈದ್ಯರ ಸೇವೆ ಲಭ್ಯವಿದೆ ಎಂದು ತಿಳಿಸಿದರು.

ಜನರಿಗೆ ಉಚಿತ ಮತ್ತು ಗುಣಮಟ್ಟದ ಸೇವೆ ಮುಖ್ಯ

ಜನರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗುವುದೇ ಮುಖ್ಯ. ವೈದ್ಯರ ಕೊರತೆ ಇರುವ ಕಡೆಗಳಲ್ಲಿ ಸಮೀಪದ ವೈದ್ಯಕೀಯ ಕಾಲೇಜುಗಳ ವೈದ್ಯರ ನೆರವು ಪಡೆಯಲಾಗುವುದು. ಸರ್ಕಾರಿ ಅಥವಾ ಖಾಸಗಿ ಎಂಬುದಕ್ಕಿಂತ ಜನರಿಗೆ ಉಚಿತ ಮತ್ತು ಪರಿಣಾಮಕಾರಿ ಚಿಕಿತ್ಸೆ ದೊರೆಯುವುದೇ ಮುಖ್ಯ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳ ಖಾಲಿ ಹುದ್ದೆಗಳಿಗೆ ವೈದ್ಯರನ್ನು ನೇಮಿಸುವುದು ಸವಾಲಾಗಿದ್ದು, ಹೆಚ್ಚಿನ ವೇತನ ನೀಡಿದರೂ ಕೆಲವೊಮ್ಮೆ ವೈದ್ಯರು ಸೇವೆಗೆ ಮುಂದೆ ಬರುವುದಿಲ್ಲ. ವೈದ್ಯರನ್ನು ಬಲವಂತವಾಗಿ ಕರೆತರುವುದು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ

ಸಚಿವ ಸಂಪುಟದಲ್ಲಿ ಸ್ಥಾನ ಪಡೆಯದ ನಾಯಕರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖಾದರ್, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಈ ಕುರಿತು ತಾನು ಯಾವುದೇ ರಾಜಕೀಯ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕುರಿತು ಸ್ಪಷ್ಟನೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ಆಸಕ್ತಿ ಇಲ್ಲ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವ ಜಿಲ್ಲೆಯ ಉಸ್ತುವಾರಿ ನೀಡಬೇಕೆಂಬುದನ್ನು ಮುಖ್ಯಮಂತ್ರಿ ತೀರ್ಮಾನಿಸುತ್ತಾರೆ. ತಾನು ಹಿಂದೆ ಕೋಲಾರ, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ಯಾವ ಜಿಲ್ಲೆಯ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿರ್ವಹಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಜಯರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

Exit mobile version