ಸಜಿಪ ಮೂಡ : ಆಟೋ ರಿಕ್ಷಾ -ಬೈಕ್ ಢಿಕ್ಕಿ ; ಸವಾರ ಮೃತ್ಯು
ಬಂಟ್ವಾಳ : ಆಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರವಿವಾರ ರಾತ್ರಿ ನಡೆದಿದೆ.
ಮೃತ ಯುವಕನನ್ನು ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ. ನಂದಾವರ ಶಾಲಾ ಸಮೀಪ ಗ್ಯಾರೇಜ್ ನಡೆಸುತ್ತಿದ್ದ ಈತ ರವಿವಾರ ರಾತ್ರಿ ಸಜಿಪಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆಯಲ್ಲಿ ಶಿವಾಜಿ ಕುಮಾರ್ ಎಂಬವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತಕ್ಷಣ ಸ್ಥಳೀಯರು ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ತಲೆಗೆ ಗಂಭೀರ ಗಾಯಗೊಂಡಿದ್ದ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಾವರ ನಿವಾಸಿ ಝೈನುಲ್ ಆಬಿದೀನ್ ಎಂಬವರು ನೀಡಿರುವ ದೂರಿನಂತೆ ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ರಶೀಕ್ ತಂದೆ, ತಾಯಿ, ಸಹೋದರ-ಸಹೋದರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.













