ಉಡುಪಿ ವಿಟ್ಲ ಪಿಂಡಿ ಮಹೋತ್ಸವಕ್ಕೆ ಪೊಲೀಸ್​ ಇಲಾಖೆಯಿಂದ ಬಿಗಿ ಬಂದೋಬಸ್ತ್​

Spread the love

ಉಡುಪಿ ವಿಟ್ಲ ಪಿಂಡಿ ಮಹೋತ್ಸವಕ್ಕೆ ಪೊಲೀಸ್​ ಇಲಾಖೆಯಿಂದ ಬಿಗಿ ಬಂದೋಬಸ್ತ್​

ಉಡುಪಿ: ಉಡುಪಿ ನಗರದ ಪ್ರಸಿದ್ಧ ವಿಟ್ಲ ಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

ಮಹೋತ್ಸವದ ಬಂದೋಬಸ್ತ್ ಕಾರ್ಯಕ್ಕಾಗಿ ಒಟ್ಟು 1 ಪೊಲೀಸ್ ಅಧೀಕ್ಷಕರು, 1 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 2 ಡಿವೈಎಸ್ಪಿಗಳು, 6 ಪೊಲೀಸ್ ಇನ್ಸ್ಪೆಕ್ಟರ್ಗಳು, 25 ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳು ಹಾಗೂ 35 ಸಹಾಯಕ ಸಬ್ಇನ್ಸ್ಪೆಕ್ಟರ್ಗಳನ್ನು ನಿಯೋಜಿಸಲಾಗಿದೆ. ಇದರೊಂದಿಗೆ 186 ಹೆಡ್ ಕಾನ್ಸ್ಟೇಬಲ್ಗಳು, ಪೊಲೀಸ್ ಕಾನ್ಸ್ಟೇಬಲ್ಗಳು ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿ ಮತ್ತು 50 ಗೃಹರಕ್ಷಕ ದಳದ ಸಿಬ್ಬಂದಿ ಬಂದೋಬಸ್ತ್ ಕರ್ತವ್ಯದಲ್ಲಿ ಭಾಗವಹಿಸಲಿದ್ದಾರೆ.

ಹೆಚ್ಚುವರಿ ಭದ್ರತೆಯಾಗಿ 1 ಕೆಎಸ್ಆರ್ಪಿ ತುಕಡಿ, 9 ಡಿಎಆರ್ ತುಕಡಿಗಳು, 3 ಅಗ್ನಿಶಾಮಕ ದಳದ ತಂಡಗಳು, 2 ಆಂಬ್ಯುಲೆನ್ಸ್ಗಳು ಹಾಗೂ 3 ಡ್ರೋನ್ ತಂಡಗಳನ್ನು ನಿಯೋಜಿಸಲಾಗಿದೆ. ಮಹೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ವಿಶೇಷ ಮುನ್ನೆಚ್ಚರಿಕೆ ವಹಿಸಿದೆ.

ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ವಾಹನಗಳ ಸುಗಮ ಪಾರ್ಕಿಂಗ್ಗಾಗಿ ನಗರದ ವಿವಿಧೆಡೆ ಒಟ್ಟು ಏಳು ಸ್ಥಳಗಳನ್ನು ಗುರುತಿಸಲಾಗಿದೆ. ಎಂ.ಜಿ.ಎಂ. ಮೈದಾನ, ಶ್ರೀಕೃಷ್ಣ ಮಠ ರಾಜಾಂಗಣ ಪಾರ್ಕಿಂಗ್ ಸ್ಥಳ, ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ ಪಾರ್ಕಿಂಗ್ ಸ್ಥಳ, ಬೀಡಿನಗುಡ್ಡೆ ಮೈದಾನ, ಬೀಡಿನಗುಡ್ಡೆ ಕ್ರೀಡಾಂಗಣ, ವಿದ್ಯೋದಯ ಶಾಲೆ ಪಾರ್ಕಿಂಗ್ ಸ್ಥಳ ಹಾಗೂ ಮಾಂಡವಿ ರಾಯಲ್ ಗಾರ್ಡನ್ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಮಹೋತ್ಸವದ ವೇಳೆ ಉಂಟಾಗಬಹುದಾದ ಜನಸಂದಣಿಯನ್ನು ನಿಯಂತ್ರಿಸುವುದರ ಜೊತೆಗೆ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಇದಕ್ಕಾಗಿ ಅಕ್ಕಪಡೆ ಹಾಗೂ ಸ್ವಯಂಸೇವಕರ ನೆರವನ್ನು ಪಡೆಯಲಾಗುತ್ತಿದೆ. ನಗರದ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿಯಾಗಿ 45 ಕಡೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಿರಂತರ ಕಣ್ಗಾವಲು ನಡೆಸಲಾಗುತ್ತಿದೆ.

ಸಾರ್ವಜನಿಕರಿಗೆ ಅಗತ್ಯ ಸೂಚನೆಗಳನ್ನು ನೀಡಲು 12 ಸಾರ್ವಜನಿಕ ಘೋಷಣಾ ವ್ಯವಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದೇ ವೇಳೆ ಹಿಂದಿನ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರನ್ನು ಗುರುತಿಸಿ ಅವರ ಚಲನವಲನದ ಮೇಲೆ ನಿಗಾ ವಹಿಸುವ ಉದ್ದೇಶದಿಂದ ಫಿಂಗರ್ಪ್ರಿಂಟ್ ಸ್ಕ್ಯಾನರ್ಗಳನ್ನು ಬಳಸಲಾಗುತ್ತಿದೆ. ಮಹೋತ್ಸವ ನಡೆಯುವ ಸಂಪೂರ್ಣ ಪ್ರದೇಶದ ಮೇಲೆ ಡ್ರೋನ್ ಕ್ಯಾಮೆರಾಗಳ ಮೂಲಕವೂ ನಿರಂತರ ನಿಗಾ ಇರಿಸಲಾಗುತ್ತದೆ.

ವಿಟ್ಲ ಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಶಾಂತಿಯುತವಾಗಿ ಮತ್ತು ಸುರಕ್ಷಿತವಾಗಿ ನಡೆಯಲು ಪೊಲೀಸ್ ಇಲಾಖೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಪೊಲೀಸ್ ಸಿಬ್ಬಂದಿ ನೀಡುವ ಸೂಚನೆಗಳನ್ನು ಅನುಸರಿಸುವ ಮೂಲಕ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.


Spread the love
Subscribe
Notify of

0 Comments