ಎಸ್ ಐ ಆರ್ ಸಂವಿಧಾನದ ಆಶಯ ಬುಡಮೇಲು ಮಾಡುವ ಅಪಾಯ : ಬಿ ಕೆ ಹರಿಪ್ರಸಾದ್
ಮಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ನಾವು ಎಚ್ಚರ ತಪ್ಪಿದರೆ, ಬಿಜೆಪಿ, ಆರ್ಎಸ್ಎಸ್ನವರು ಸಂವಿಧಾನ, ಸಂವಿಧಾನದ ಆಶಯವನ್ನು ಬುಡಮೇಲು ಮಾಡುವ ಅಪಾಯವಿದೆ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಎಸ್ಐಆರ್ ಪ್ರಕ್ರಿಯೆ ವೇಳೆ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು
ಕಾಂಗ್ರೆಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ಆಯೋಜಿಸಿದ್ದ ಎಸ್ಐಆರ್ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.
ಹಿಂದೂ ರಾಷ್ಟ್ರ ರಚನೆ ಅಎಸ್ಐಆರ್, ಬಿಜೆಪಿಯವರ ಉದ್ದೇಶವಾಗಿದ್ದು, ಅದಕ್ಕೆ ಪೂರಕವಾಗಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್ ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟು, ಅವರು ನಮ್ಮ ದೇಶದ ನಾಗರಿಕರೇ ಅಲ್ಲ ಎಂದು ಮಾಡಲು ಅವರು ಮುಂದಾಗಿದ್ದಾರೆ. ಪ್ರಜಾಪ್ರಭುತ್ವ ಒಪ್ಪಿಕೊಂಡಿರುವ ಭಾರತದಲ್ಲಿ ಸಂವಿಧಾನದ ಅಡಿಯಲ್ಲಿ ನಾವಿದ್ದೇವೆ. ಈ ದೇಶದ ಆತ್ಮವೇ ಬಹುತ್ವ. ಎಲ್ಲ ಜಾತಿ ಧರ್ಮದ ಜನರು ಒಟ್ಟಾಗಿ ಬದುಕುವುದನ್ನು ನಮ್ಮ ಹಿರಿಯರು ಹೇಳಿಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಈ ದೇಶದ ಉಳಿವು ಸಾಧ್ಯ ಎಂದರು.
ಬುದ್ಧಿವಂತರ ಜಿಲ್ಲೆ ಎನಿಸಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಕುದ್ಮುಲ್ ರಂಗರಾವ್ ಅಂತಹವರು ಆಗಿಹೋಗಿದ್ದಾರೆ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಗಾಢವಾಗಿದ್ದ ಜಿಲ್ಲೆ ಇದು. ಕಾಂಗ್ರೆಸ್ ಕಾರ್ಯಕರ್ತರು ಜನರ ಮಧ್ಯೆ ಇದ್ದು, ಬಿಜೆಪಿಯ ಷಡ್ಯಂತ್ರವನ್ನು ಸಮಾಜಕ್ಕೆ ತಿಳಿಸಬೇಕು ಎಂದರು.
ಕಾಂಗ್ರೆಸ್ ಪಕ್ಷ ಅನ್ನುವುದು ಅಧಿಕಾರವಲ್ಲ, ಅದೊಂದು ಜವಾಬ್ದಾರಿ. ನಮ್ಮ ಹೊಣೆಗಾರಿಕೆ ಅರಿತು ಈ ದೇಶದ ನಾಗರಿಕರನ್ನು ರಕ್ಷಿಸಬೇಕಾಗಿದೆ. ಈ ದೇಶ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷ ಇರಬೇಕು ಎಂದು ಹೇಳಿದರು.
ಆರೋಗ್ಯ ಸಚಿವ ಯು.ಟಿ. ಖಾದರ್, ಶಾಸಕ ಮಂಕಾಳ ವೈದ್ಯ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಪಕ್ಷದ ಎಸ್ ಐಆರ್ ಜಾಗೃತಿ ಸಮಿತಿ ಅಧ್ಯಕ್ಷ ವಿ. ಆರ್. ಸುದರ್ಶನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕಾಂಗ್ರೆಸ್ ಪ್ರಮುಖರಾದ ವಿನಯ ಕುಮಾರ್ ಸೊರಕೆ, ರಮಾನಾಥ ರೈ, ಅಭಯಚಂದ್ರ ಜೈನ್, ಇಬ್ರಾಹಿಂ, ಜೆ.ಆರ್.ಲೋಬೊ ಉಪಸ್ಥಿತರಿದ್ದರು.
