ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯನ್ನು ಲೋಕಾರ್ಪಣೆಗೆ ಅಗತ್ಯ ನಿರ್ಣಯ ಕೈಗೊಳ್ಳಿ: ಯಶ್ಪಾಲ್ ಸುವರ್ಣ

Spread the love

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯನ್ನು ಲೋಕಾರ್ಪಣೆಗೆ ಅಗತ್ಯ ನಿರ್ಣಯ ಕೈಗೊಳ್ಳಿ: ಯಶ್ಪಾಲ್ ಸುವರ್ಣ

ಉಡುಪಿ: ಪ್ರಥಮ ಬಾರಿಗೆ ಕರಾವಳಿ ಭಾಗದ ಮಂಗಳೂರಿನಲ್ಲಿ ದಿನಾಂಕ ಸೆಪ್ಟೆಂಬರ್ 18 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಕರಾವಳಿ ಕರ್ನಾಟಕದ ಜನತೆಗೆ ಹೆಮ್ಮೆಯ ವಿಷಯ ಹಾಗೂ ಐತಿಹಾಸಿಕ ಕ್ಷಣವಾಗಿದೆ. ಈ ಸಂಪುಟ ಸಭೆಯಲ್ಲಿ ಉಡುಪಿಯ ಪ್ರಮುಖ ಬೇಡಿಕೆಗಳಾದ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯ ಅನುದಾನ, ವೈದ್ಯಕೀಯ ಉಪಕರಣಗಳು ಹಾಗೂ ಪೂರ್ಣ ಪ್ರಮಾಣದಲ್ಲಿ ಆಸ್ಪತ್ರೆ ಕಾರ್ಯಾಚರಿಸಲು ಅಗತ್ಯ ಸಿಬ್ಬಂದಿ ಮಂಜೂರಾತಿ ನೀಡಲು ನಿರ್ಣಯ ಕೈಗೊಂಡು, ಶೀಘ್ರವಾಗಿ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಒದಗಿಸಲು ಕ್ರಮ ವಹಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಅಲ್ಲದೇ, ಉಡುಪಿಯ ಪ್ರಮುಖ ಬೇಡಿಕೆಗಳಾದ ಕೃಷಿ ಪದವಿ ಕಾಲೇಜು ಸ್ಥಾಪನೆ, ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿ, ಸರಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಗೆ ಅನುದಾನ, ಮೀನುಗಾರಿಕೆಗೆ ಪ್ರೋತ್ಸಾಹ, ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ, ಶಾಲೆಗಳಿಗೆ ಅನುದಾನ, ಪ್ರಾಕೃತಿಕ ವಿಕೋಪಕ್ಕೆ ಅನುದಾನ, ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ, ಬರ ಪರಿಹಾರಕ್ಕೆ ಅನುದಾನ, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಕ್ರೀಡಾಂಗಣಗಳ ನಿರ್ಮಾಣ, ಮಳೆಯಿಂದ ಹಾನಿಗೊಳಗಾದ ವಾಸದ ಮನೆಗಳ ಮಳೆಹಾನಿಗೆ ವೈಯಕ್ತಿಕ ಪರಿಹಾರ ಮಂಜೂರಾತಿ ನೀಡುವಂತೆ ಮಾಡಿದ್ದಾರೆ.

ಸರ್ಕಾರಿ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಸಿಗುವ ಸೇವೆಗಳು ಕ್ಲಪ್ತ ಸಮಯದಲ್ಲಿ ಸಿಗುವಂತಾಗಲು ಅಗತ್ಯ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಖಾಲಿ ಹುದ್ದೆಗಳ ಭರ್ತಿ ಮಾಡಲು ಕ್ರಮ, ಶಾಲಾ ಕಾಲೇಜು ಮಕ್ಕಳಿಗೆ ಅನುಕೂಲವಾಗುವಂತೆ ಸರಕಾರಿ ಬಸ್ ಸೌಲಭ್ಯ, ವಿವಿಧ ನಿಗಮ ಮಂಡಳಿಗಳಿಗೆ ಹೆಚ್ಚಿನ ಅನುದಾನ ಒದಗಿಸುವುದು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಹಾ ಯೋಜನೆ ಅಂತಿಮಗೊಳಿಸುವುದು ಹಾಗೂ ಶ್ರೀ ಕೃಷ್ಣ ಕಾರಿಡಾರ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಉಡುಪಿಯ ಸಮಸ್ತ ಜನತೆಯ ಪರವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.


Spread the love
Subscribe
Notify of

0 Comments