ಎಂ.ಡಿ.ಎಂ.ಎ, ಹೈಡ್ರೋಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ, ₹3.31 ಲಕ್ಷ ಮೌಲ್ಯದ ಸೊತ್ತು ವಶ
ಉಡುಪಿ: ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ (MDMA) ಪೌಡರ್, ಹೈಡ್ರೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್ಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ₹3,31,500 ಮೌಲ್ಯದ ಮಾದಕ ವಸ್ತುಗಳು, ಕಾರು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಹಾಗೂ ಉಡುಪಿ ಸಂಚಾರ ಠಾಣೆಯ ಪಿಎಸ್ಐ ಮಹೇಶ್ ಟಿ.ಎಂ. ಅವರೊಂದಿಗೆ ಕಾರ್ಯಾಚರಣೆ ನಡೆಸಿದ ವಿಶೇಷ ತಂಡವು, ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಬುಡ್ನಾರ್ ಸಾರ್ವಜನಿಕ ಸ್ಥಳದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದೆ.
ಬಂಧಿತ ಆರೋಪಿಗಳನ್ನು, ಉದ್ಯಾವರ ಪಿತ್ರೋಡಿ ನಿವಾಸಿ ದಿ. ಸದಾಶಿವ ಅವರ ಪುತ್ರ ವಿಜಯ ಪೂಜಾರಿ (36), ಕುಕ್ಕಂದೂರು ನಿವಾಸಿ ಎಂ ಡಿ ಅಬ್ದುಲ್ ಜಬ್ಬಾರ್ ಅವರ ಪುತ್ರ ಪಿ.ಎ. ಮೊಹಮ್ಮದ್ ಸಮ್ಮಾಸ್ (24), ಮತ್ತು ಮಿಯಾರು ಕುಂಟಿಬೈಲು ನಿವಾಸಿ ದಿ. ರಘು ಶೆಟ್ಟಿ ಅವರ ಪುತ್ರ ಆಕಾಶ್ ಶೆಟ್ಟಿ (20 ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ, 4 ಗ್ರಾಂ ಎಂಡಿಎಂಎ ಪೌಡರ್, 2.5 ಗ್ರಾಂ ಹೈಡ್ರೋಗಾಂಜಾ, 3.65 ಗ್ರಾಂ ಎಂಡಿಎಂಎ ಟ್ಯಾಬ್ಲೆಟ್, 3 ಗ್ರಾಂ ಗಾಂಜಾ, ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಒಂದು ಕಾರು, ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ವಶಪಡಿಸಿಕೊಂಡ ಸೊತ್ತಿನ ಮೌಲ್ಯ ₹3,31,500 ಎಂದು ಅಂದಾಜಿಸಲಾಗಿದೆ.
ಆರೋಪಿಗಳು ಕಾಪು, ಉಡುಪಿ, ಮಣಿಪಾಲ ಹಾಗೂ ಕಾರ್ಕಳ ಭಾಗಗಳಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎಂಬ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪ್ರವೀಣ್ ಕುಮಾರ್, ಹಿರಿಯಡ್ಕ ಪೊಲೀಸ್ ಠಾಣೆಯ ಪ್ರವೀಣ್ ಶೆಟ್ಟಿಗಾರ್, ಮಲ್ಪೆ ವೃತ್ತ ಕಚೇರಿಯ ಇಂದ್ರೇಶ್, ಹನುಮಂತ ಅಸ್ಕಿ, ಮನು ಕುಮಾರ್, ರಶ್ಮೀ ಹೆಗಡೆ, ರವಿ ಕುಮಾರ್ ಹಾಗೂ ಉಡುಪಿ ಸಂಚಾರ ಠಾಣೆಯ ಶ್ರೀನಿವಾಸ, ಸಂತೋಷ ಮತ್ತು ದಿನೇಶ್ ಅವರನ್ನೊಳಗೊಂಡ ವಿಶೇಷ ತಂಡ ಭಾಗವಹಿಸಿತ್ತು.













