ಸರ್ವಿಸ್ ಬಸ್ ನಿಲ್ದಾಣದಲ್ಲಿ ಸಮಸ್ಯೆಗಳಿಗೆ ಉಡುಪಿ ಶಾಸಕರ ನಿರ್ಲಕ್ಷ್ಯತೆ ಕಾರಣ : ಪ್ರಸಾದ್ ರಾಜ್ ಕಾಂಚನ್
ಉಡುಪಿ: ಮಳೆಗಾಲದಲ್ಲಿ ನಗರದ ಸರ್ವಿಸ್ ಬಸ್ ಸ್ಟ್ಯಾಂಡ್ ನಲ್ಲಿ ನೀರು ಸೋರಿಕೆಯಾಗಿ ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಯಾಣಿಕರು ಮಳೆಯ ಸಂದರ್ಭದಲ್ಲಿ ಕೂರಲು ಸಾಧ್ಯವಾಗದೆ ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದರು ಮತ್ತು ಸರಕಾರದ ಹಂತದಲ್ಲಿ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ತನ್ನಿಂದ ಸಾಧ್ಯವಾಗುವ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಅವರು ನಾನು ನಗರದ ಬಸ್ ಸ್ಟ್ಯಾಂಡಿಗೆ ಭೇಟಿ ನೀಡಿದ ವೇಳೆ ಇಲ್ಲಿನ ಅಂಗಡಿ ಮ್ಹಾಲಿಕರು ಸಾವರ್ಜನಿಕರು ಇಲ್ಲಿನ ಸಮಸ್ಯೆಗಳ ಕುರಿತು ತಮ್ಮ ದೂರುಗಳನ್ನು ನೀಡಿದ್ದಾರೆ. ಈಗಾಗಲೇ ನಗರಸಭೆಯ ಆಯುಕ್ತರನ್ನು ಸಂಪರ್ಕಿಸಿ ಇಲ್ಲಿನ ಸಮಸ್ಯೆಗಳನ್ನು ಕೂಡಲೇ ಪರಿಹಾರ ಮಾಡುವಂತೆ ಕೋರಿದ್ದೇನೆ. ಬಸ್ ನಿಲ್ದಾಣದಲ್ಲಿ ಬಸ್ಸುಗಳನ್ನು ಅನಗತ್ಯವಾಗಿ ಪಾರ್ಕ್ ಮಾಡಿ ಗ್ರಾಹಕರು ಅಂಗಡಿಗಳಿಗೆ ಬರದಂತೆ ತೊಂದರೆ ಉಂಟು ಮಾಡುತ್ತಿರುವ ಕುರಿತು ಕೂಡ ಅಂಗಡಿ ಮ್ಹಾಲಿಕರು ದೂರು ನೀಡಿದ್ದಾರೆ ಈ ಕುರಿತು ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ಧೇವೆ. ಬಸ್ ಸ್ಟ್ಯಾಂಡ್ ಅವ್ಯವಸ್ಥೆ ಕಂಡಾಗ ಉಡುಪಿ ಶಾಸಕರ ವೈಫಲ್ಯ ಎದ್ದುಕಾಣುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಅವರು ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸರಿಯಲ್ಲ. ಶಾಸಕರು ಇನ್ನಾದರೂ ಈ ಬಗ್ಗೆ ನಿಗಾವಹಿಸಿ ಸಮಸ್ಯೆ ಪರಿಹರಿಸುವಂತೆ ಅವರ ಮನವಿ ಮಾಡಿದರು.
