ಕೇಂದ್ರ ಬಜೆಟ್ 2026: ಕರಾವಳಿ ಜಿಲ್ಲೆಗಳಿಗೆ ಮತ್ತೊಮ್ಮೆ ಚೊಂಬು – ರಮೇಶ್ ಕಾಂಚನ್
ಉಡುಪಿ: ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ನಲ್ಲಿ ಕರ್ನಾಟಕ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಪ್ರಕಟಿಸದೆ ಮತ್ತೊಮ್ಮೆ ಚೊಂಬು ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ.
ಕರಾವಳಿಯ ಮೀನುಗಾರಿಕೆ, ಪ್ರವಾಸೋದ್ಯಮ ಅಭಿವೃದ್ದಿ, ಬಂದರುಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ನಲ್ಲಿ ಭಾರೀ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿತ್ತು ಆದರೆ ಅಂತಹ ಯಾವುದೇ ರೀತಿಯ ನಿರ್ದಿಷ್ಟ ಯೋಜನೆಗಳನ್ನು ವಿತ್ತ ಸಚಿವರು ಕರಾವಳಿ ಜಿಲ್ಲೆಗಳಿಗೆ ನೀಡದೆ ಮತ್ತೊಮ್ಮೆ ಮೋಸ ಮಾಡಿದ್ದಾರೆ. ದೊಡ್ಡ ಉದ್ಯಮಿಪತಿಗಳಿಗೆ ಈ ಬಾರಿಯ ಬಜೆಟ್ ಲಾಭದಾಯಕವಾಗಿದೆ ಹೊರತು ಮಧ್ಯಮ ವರ್ಗದವರ ಜೀವನ ಸುಧಾರಣೆಯ ನಿಟ್ಟಿನಲ್ಲಿ ಯಾವುದೇ ರೀತಿಯ ಘೋಷಣೆಗಳನ್ನು ಮಾಡಿಲ್ಲ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ರಾಜ್ಯದ ಅಭಿವೃದ್ದಿಯ ನಿಟ್ಟಿನಲ್ಲಿ ತಮ್ಮ ಬಜೆಟ್ನಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲ. ಕೃಷಿಕರಿಗೆ ಬೆಂಬಲವಾಗುವ ನಿಟ್ಟಿನಲ್ಲಿ ಪಿಎಂ ಕಿಸಾನ್ ಯೋಜನೆ ಮೊತ್ತವನ್ನು ಏರಿಕೆ ಮಾಡಬಹುದು ಎಂದು ಕೊಂಡಿದ್ದ ನಿರೀಕ್ಷೆ ಕೂಡ ಹುಸಿಯಾಗಿದೆ. ಕೃಷಿಕ ವರ್ಗದ ಕಲ್ಯಾಣದ ನಿಟ್ಟಿನಲ್ಲಿ ಯಾವುದೇ ಹೊಸ ಯೋಜನೆಗಳನ್ನು ಕೇಂದ್ರ ಸರಕಾರ ಘೋಷಣೆ ಮಾಡದಿರುವುದು ರೈತ ವರ್ಗಕ್ಕೆ ಮಾಡಿರುವ ಅನ್ಯಾಯವಾಗಿದೆ.
ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿ ಮತ್ತು ಕೇರಳ ರಾಜ್ಯಗಳಿಗೆ ಕೇಂದ್ರ ಬಜೆಟ್ನಲ್ಲಿ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿರುವುದು ಬಿಟ್ಟರೆ ಕರ್ನಾಟಕ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳ ಘೋಷಣೆ ಮಾಡಿಲ್ಲ. ಬೇರೆ ರಾಜ್ಯಗಳಿಗೆ ರೈಲು ಯೋಜನೆಯಲ್ಲಿ ಅವಕಾಶ ನೀಡಿದ್ದು ಕರಾವಳಿಯ ರೈಲು ಹಳಿ ಅಭಿವೃದದ್ದಿಯ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಿದ್ದು ಇದೊಂದು ನಿರಾಶದಾಯಕ ಬಜೆಟ್ ಆಗಿದ್ದು ರಾಜ್ಯ ಸರಕಾರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
