ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Spread the love

ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಸುಮಾರು ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಹು ಪ್ರಕರಣಗಳ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು ನಗರ ಪೊಲೀಸ್ ಪ್ರಕಟಣೆ ಪ್ರಕಾರ, ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆ. ಅಬ್ದುಲ್ ಬಶೀರ್ ಅಲಿಯಾಸ್ ಆರ್ಗ ಬಶೀರ್ (50), ತಂದೆ ದಿ. ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಮಂಗಳೂರು ನಗರ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಂಗಳೂರು ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿದ್ದವು.
ಆರೋಪಿ ಕಳೆದ ಸುಮಾರು ನಾಲ್ಕು ವರ್ಷಗಳಿಂದ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆ ನ್ಯಾಯಾಲಯವು ದಸ್ತಗಿರಿ ವಾರಂಟ್ ಹಾಗೂ ಉದ್ಘೋಷಣಾ ವಾರಂಟ್ ಹೊರಡಿಸಿತ್ತು.
ಆರೋಪಿ ತನ್ನ ಮೂಲ ನಿವಾಸವಾದ ಮೂಡಬಿದ್ರೆ ತಾಲೂಕು ತೆಂಕ ಮಿಜಾರು ಗ್ರಾಮದ ಮನೆಯನ್ನು ಬಿಟ್ಟು, ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಸಮೀಪದ ಪರ್ಲಿಯಾ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತು. ಅದರಂತೆ ದಿನಾಂಕ 18-04-2026 ರಂದು ಸಂಜೆ 7.30ರ ಸುಮಾರಿಗೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡರು.
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ.
ಬಂಧಿತ ಆರೋಪಿ ವಿರುದ್ಧ ಕಳ್ಳತನ, ದರೋಡೆ, ದಾಳಿ, ಅಪಹರಣ, ಶಸ್ತ್ರಾಸ್ತ್ರ ಕಾಯ್ದೆ, ಜಾನುವಾರು ಕ್ರೂರತೆ ತಡೆ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳ ಅಡಿಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ಮೇಲಾಧಿಕಾರಿಗಳ ನಿರ್ದೇಶನದಂತೆ ಮೂಡಬಿದ್ರೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments