ಬಾಲಕಾರ್ಮಿಕ ಪದ್ಧತಿ ತೊಲಗಿಸಿ ಮಕ್ಕಳಿಗೆ ಬಾಲ್ಯಾವಸ್ಥೆ ಅನುಭವಿಸಲು ಬಿಡಿ – ಜೈಬುನ್ನೀಸಾ
ಮಂಗಳೂರು: ಬಾಲಕಾರ್ಮಿಕ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಸಮಾಜದಲ್ಲಿರುವ ಪ್ರತಿಯೊಬ್ಬರೂ ಕೂಡ ಜವಾಬ್ದಾರಿಯುತವಾಗಿ ಕೈ ಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.
ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೆÇಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳು, ದಕ್ಷಿಣ ಕನ್ನಡ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಉದ್ಘಾಟಿಸಿ ಮಾತನಾಡಿದರು.
ಯಾವುದೇ ಜಾಗೃತಿ ಜಾಥಾ ಅಥವಾ ಅಭಿಯಾನಗಳು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ಬದಲಿಗೆ ಬಾಲಕಾರ್ಮಿಕತೆಯನ್ನು ಹೋಗಲಾಡಿಸಲು ನಿರಂತರವಾಗಿ ಹೋರಾಟ ನಡೆಸಬೇಕು. ಬಾಲಕಾರ್ಮಿಕರು ಕಂಡು ಬಂದಲ್ಲಿ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡುವ ಜೊತೆಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸುವುದರಿಂದ ಬಾಲಕಾರ್ಮಿಕ ಪದ್ಧತಿಯನ್ನು ತೊಲಗಿಸಬಹುದು ಎಂದು ಅವರು ಹೇಳಿದರು.
ಮಕ್ಕಳ ಬಾಲ್ಯವೆಂದರೆ ಸುವರ್ಣಾವಕಾಶ. ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ದುಡಿಸಿಕೊಂಡರೆ ದೈಹಿಕವಾಗಿ, ಮಾನಸಿಕವಾಗಿ, ಶೈಕ್ಷಣಿಕವಾಗಿ ಅಸಮರ್ಥರಾಗುತ್ತಾರೆ. ಅವರ ಸಂತೋಷದಿಂದ ಕಲಿಯುವ ಆಟ ಪಾಠಗಳ ಸುವರ್ಣವಕಾಶವನ್ನು ಕಸಿದುಕೊಂಡಂತಾಗುತ್ತದೆ ಎಂದು ಅವರು ಹೇಳಿದರು. ಇಂತಹ ಸಂದರ್ಭಗಳಲ್ಲಿ ಅವರ ದೈಹಿಕ ಸಾಮಥ್ರ್ಯ ಕುಗ್ಗಿ ಅಥವಾ ಅಸುರಕ್ಷಿತ ವಾತಾವರಣದಿಂದ ಮಕ್ಕಳು ಸುಲಭವಾಗಿ ಧೂಮಪಾನ, ಮದ್ಯಪಾನ, ಮಾದಕ ವ್ಯಸನದಂತಹ ಕೆಟ್ಟ ಚಟಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸಿ ಮಕ್ಕಳಿಗೆ ಅವರ ಬಾಲ್ಯಾವಸ್ಥೆಯನ್ನು ಅನುಭವಿಸಲು ಅವಕಾಶವನ್ನು ನೀಡಬೇಕು ಎಂದು ಹೇಳಿದರು.
ಮಕ್ಕಳನ್ನು ದುಡಿಸಿಕೊಳ್ಳುವ ಸಂಸ್ಥೆಗಳ ಮಾಲೀಕರಿಗೆ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳದಂತೆ ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಅಗತ್ಯವಿದೆ. 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಂಡರೆ ಸೆರೆಮನೆ ವಾಸ ಮತ್ತು 20 ಸಾವಿರದಿಂದ 50 ಸಾವಿರದವರೆಗೆ ವಿಸ್ತರಿಸಬಹುದಾದ ದಂಡ ವಿಧಿಸಲಾಗುತ್ತದೆ ಎಂದು ಅವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಮಾತನಾಡಿ, ಮಕ್ಕಳನ್ನು ಜೀವನ ಕೌಶಲ್ಯಗಳನ್ನು ಅಭಿವೃದ್ಧಿಗೊಳಿಸುವ ಚಟುವಟಿಕೆಗಳಲ್ಲಿ ತೊಡಗಿಸಬೇಕೆ ವಿನಃ ಹಣ ಸಂಪಾದಿಸುವ ಅಪಾಯಕಾರಿ ಕೆಲಸಗಳಿಗೆ ತೊಡಗಿಸಿಕೊಳ್ಳಬಾರದು ಎಂದು ಅವರು ಹೇಳಿದರು. ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಮಕ್ಕಳ ಬಾಲ್ಯ ನಾಶವಾಗುತ್ತದೆ. ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮಕ್ಕಳಿಗೆ ಅವರ ಬಾಲ್ಯದ ಮಹತ್ವವನ್ನು ತಿಳಿಸುವುದರಿಂದ ಸಮಾಜ ವಿರೋಧಿ ಚಟುವಟಿಕೆಗಳನ್ನು ತೊಲಗಿಸಬಹುದು ಎಂದು ಅವರು ಹೇಳಿದರು. ಬಾಲಕಾರ್ಮಿಕ ಪದ್ಧತಿಯು ಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುವ ಸಾಮಾಜಿಕ ಪಿಡುಗು. ಈ ಪದ್ಧತಿಯ ನಿರ್ಮೂಲನೆಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪೋಷಕರು ಕೇವಲ ತಮ್ಮ ಮಕ್ಕಳ ಪಾಲನೆ-ಪೋಷಣೆ ಮಾಡುವುದು ಮಾತ್ರವಲ್ಲದೆ, ಅವರ ಹಕ್ಕುಗಳನ್ನು ರಕ್ಷಿಸುವಲ್ಲಿ ಜವಾಬ್ದಾರಿಗಳನ್ನು ವಹಿಸಬೇಕು ಎಂದರು.
ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ದಾಸ್ ನಾಯಕ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪನಿರ್ದೇಶಕ ರಾಜೇಶ್ ಮಿಶ್ರಕೋಟಿ, ಪಡಿ ಸಂಸ್ಥೆ ನಿರ್ದೇಶಕ ರೆನ್ನಿ ಡಿಸೋಜಾ, ಡಿವೈಎಸ್ಪಿ ಮಂಜುನಾಥ್ ಆರ್.ಬಿ, ವಕೀಲ ಸಂಘದ ಅಧ್ಯಕ್ಷ ಜಗದೀಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಸ್ ಶಶಿಧರ್, ಯೋಜನಾ ನಿರ್ದೇಶಕ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
ಹಿರಿಯ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗ್ಡೆ ಸ್ವಾಗತಿಸಿ, ಕಾರ್ಮಿಕ ಅಧಿಕಾರಿ ವಿಲ್ಮಾ ವಂದಿಸಿ, ಉಮೇಶ್ ನಿರೂಪಿಸಿದರು.
ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಉರ್ವಾಸ್ಟೋರ್ನಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಆವರಣದವರೆಗೆ ಜಾಥಾ ಕಾರ್ಯಕ್ರಮ ನಡೆಯಿತು.













