ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ

Spread the love

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ಕಸ್ಟಡಿಗೆ ನೀಡಿದೆ.

ಪ್ರಕರಣ ಸಂಬಂಧ ಎನ್‌ಐಎ ಪ್ರತ್ಯೇಕವಾಗಿ ಎಫ್​ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಎಸ್​ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾ‌ನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು.

ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದ. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ತಿಳಿದುಬಂದಿದೆ.

ಸುಹಾಸ್ ಶೆಟ್ಟಿ ಚಲನ ವಲನಗಳ ಮೇಲೆ ಪ್ರಮುಖ ಆರೋಪಿ ಸಫ್ವಾನ್ 15 ದಿನಗಳಿಂದ ಗಮನ ಇರಿಸಿದ್ದ. ಹುಡುಗರನ್ನು ಬಿಟ್ಟು ರೇಖಿ ಮಾಡಿಸಿದ್ದನು. ಚಿಕ್ಕಮಗಳೂರಿನ ಕಳಸಾದ ರಂಜಿತ್ ಹಾಗೂ ನಾಗರಾಜ್ 15 ದಿನಗಳಿಂದ ಸಫ್ವಾನ್ ಮನೆಯಲ್ಲೇ ಇದ್ದರು. ಸುಹಾಸ್ ಶೆಟ್ಟಿ ಬಜ್ಪೆಗೆ ಬರುವ ಬಗ್ಗೆ ಅಝರುದ್ಧಿನ್ ಮಾಹಿತಿ ನೀಡಿದ್ದನು. ಎಷ್ಟು ಗಂಟೆಗೆ ಸುಹಾಸ್ ಹೊರಡುತ್ತಾನೆ, ಅವನೊಂದಿಗೆ ಯಾರಿದ್ದಾರೆ ಎಂಬುದನ್ನು ಸಫ್ವಾನ್​​ಗೆ ಮಾಹಿತಿ ನೀಡಿದ್ದನು.


Spread the love
Subscribe
Notify of

0 Comments
Inline Feedbacks
View all comments